ADVERTISEMENT

ವರ್ಷದೊಳಗೆ ಜಿಲ್ಲೆಗೆ ಎತ್ತಿನಹೊಳೆ ನೀರು: ಕೆ.ಎಚ್. ಮುನಿಯಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 5:22 IST
Last Updated 27 ಡಿಸೆಂಬರ್ 2025, 5:22 IST
ದೇವನಹಳ್ಳಿ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಚಿವ ಕೆ.ಎಚ್.‌ಮುನಿಯಪ್ಪ ಪ್ರಮಾಣ ಪತ್ರ ವಿತರಣೆ ಮಾಡಿದರು
ದೇವನಹಳ್ಳಿ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಚಿವ ಕೆ.ಎಚ್.‌ಮುನಿಯಪ್ಪ ಪ್ರಮಾಣ ಪತ್ರ ವಿತರಣೆ ಮಾಡಿದರು   

ದೇವನಹಳ್ಳಿ: ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಂದು ವರ್ಷದೊಳಗೆ ಜಿಲ್ಲೆಯ ಜನತೆಗೆ ನೀರು ಹರಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಕೊಳವೆಬಾವಿ ಪಂಪ್‌ ಮೋಟರ್‌ ವಿತರಣೆ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಎತ್ತಿನಹೊಳೆ ಯೋಜನೆಗೆ ಎದುರಾಗಿದ್ದ ಅಡೆತಡೆಗಳು ಈಗ ಬಗೆಹರಿದಿದ್ದು, ಸದ್ಯ ಸುಮಾರು 250ರಿಂದ 300 ಕಿಲೋಮೀಟರ್ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿ ಬಳಿ ನೀರನ್ನು ಶೇಖರಣೆ ಮಾಡಲಾಗುತ್ತಿದ್ದು, ಅಲ್ಲಿಂದ ಕುಂದಾಣದ ಬಳಿ ಸಂಗ್ರಹಿಸಿ ನೀರನ್ನು ಪಂಪ್ ಮೂಲಕ ವಿತರಿಸಲಾಗುವುದು ಎಂದು ವಿವರಿಸಿದರು.

ADVERTISEMENT

ಎತ್ತಿನಹೊಳೆಯಲ್ಲಿ 20 ಟಿಎಂಸಿ ನೀರಿದ್ದು, ಕೆರೆಗಳಿಗೆ ಹರಿಸುವ ಮೊದಲು ಮನೆಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುವುದು. ಒಂದು ವರ್ಷದೊಳಗೆ ಈ ಭಾಗಕ್ಕೆ ನೀರು ತಲುಪಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಎಚ್.ಎನ್ ವ್ಯಾಲಿ ಹಾಗೂ ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ಕೊಳವೆಬಾವಿಗಳಲ್ಲಿ ನೀರು ಲಭ್ಯವಾಗುತ್ತಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ ಹೇಳಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ದೇವನಹಳ್ಳಿ ತಾಲ್ಲೂಕಿನ 39 ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಲಾಗಿದ್ದು, ಅವರಿಗೆ ಪಂಪ್ ಮೋಟರ್‌ಗಳನ್ನು ವಿತರಿಸಲಾಗಿದೆ ಎಂದು ದೇವನಹಳ್ಳಿ ತಾಲ್ಲೂಕು ಇಒ ಶ್ರೀನಾಥ್ ಗೌಡ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕ್ರಿಯಾ ಯೋಜನೆಯಡಿ ಸರ್ಕಾರಿ ಶಾಲೆಗಳ ಸುಮಾರು 5,000 ಮಕ್ಕಳಿಗೆ ಉಚಿತ ತಟ್ಟೆ ಮತ್ತು ಲೋಟಗಳನ್ನು ವಿತರಿಸಲಾಗಿದ್ದು, 15 ಅಂಗನವಾಡಿಗಳಿಗೆ ಪ್ಲೇ ಕಿಟ್‌ಗಳು ಹಾಗೂ ಗ್ರಾಮೀಣ ಭಾಗದ 11 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂರು ಆಸನಗಳ 66 ಕುರ್ಚಿಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದರು.

ಬಯಪ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್, ದೇವನಹಳ್ಳಿ ಸಹಾಯಕ ಎಂಜಿನಿಯರ್‌ ವಿಕಾಸ್ ಉಪಸ್ಥಿತರಿದ್ದರು.

ರೈತರು ಭೂಮಿ ಮಾರಾಟ ಮಾಡಬೇಡಿ

ಈ ಪ್ರದೇಶಕ್ಕೆ ಕೆಸಿ ವ್ಯಾಲಿ ಹೆಚ್.ಎನ್ ವ್ಯಾಲಿ ಹಾಗೂ ಎತ್ತಿನಹೊಳೆ ನೀರು ಹರಿಯುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಹಾಯವಾಗಲಿದ್ದು ರೈತರು ಯಾರೂ ಕೂಡ ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಸಚಿವ ಕೆ.ಎಚ್‌. ಮುನಿಯಪ್ಪ ಮನವಿ ಮಾಡಿದರು.

ಪ್ರತಿ ಮನೆಗೊಂದು ಉದ್ಯೋಗ: 

ಪ್ರತಿ ಮನೆಗೆ ಕನಿಷ್ಠ ಒಬ್ಬರಿಗೆ ಉದ್ಯೋಗ ಕಲ್ಪಿಸುವುದು ತಮ್ಮ ಆದ್ಯತೆ. ಯುವಕ-ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಒದಗಿಸಲಾಗುವುದು. ಈ ಸಂಬಂಧ ಫಾಕ್ಸ್ ಖಾನ್ ಕಂಪನಿಯೊಂದಿಗೆ ಸಭೆ ನಡೆಸಲಾಗಿದ್ದು ಅವರು 25000 ಉದ್ಯೋಗಾವಕಾಶಗಳಿರುವುದಾಗಿ ತಿಳಿಸಿರುವುದನ್ನು ಸಚಿವರು ಹೇಳಿದರು.

ಮುಂದಿನ ದಿನಗಳಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ 1500 ನಿವೇಶನ ವಿತರಿಸುವ ಗುರಿ ಹೊಂದಲಾಗಿದ್ದು ಅದರ ಜೊತೆಗೆ 1000 ಮನೆಗಳನ್ನು ಮಂಜೂರು ಮಾಡಲಾಗಿದೆ
ಕೆ.ಎಚ್‌.ಮುನಿಯಪ್ಪ, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.