ಬೆಳಗಾವಿ: ಖಾಸಗಿ ವಾಹನ ಮಾಲೀಕರು ಕಾಂಟ್ರ್ಯಾಕ್ಟ್ ಕ್ಯಾರೇಜ್ ನಿಯಮ ಉಲ್ಲಂಘಿಸಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಷ್ಟವನ್ನುಂಟು ಮಾಡುತ್ತಿದ್ದಾರೆ. ಜತೆಗೆ ಇತರೇ ಅಕ್ರಮದಲ್ಲಿ ತೊಡಗಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಸಾರಿಗೆ ನಿಗಮದ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ಸಮಿತಿಯ ಕಾರ್ಯಕರ್ತರು ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಖಾಸಗಿ ಸಾರಿಗೆ ಸಂಸ್ಥೆಗಳ ಮಾಲೀಕರು ಕಾನೂನು ಬಾಹಿರವಾಗಿ ಸಾರ್ವಜನಿಕ ಆಸ್ತಿಯನ್ನು ಬಸ್ ನಿಲ್ದಾಣದಂತೆ ಬಳಸಿಕೊಳ್ಳುತ್ತಿದ್ದಾರೆ.
ಸರ್ಕಾರಿ ಬಸ್ಗಳಿಗೆ ಸಮಾನಾಂತರವಾಗಿ ಬಸ್ ಓಡಿಸುವ ಮೂಲಕ ಪರವಾನಗಿ ಕರಾರನ್ನು ಉಲ್ಲಂಘಿ ಸುತ್ತಿದ್ದಾರೆ. ಈ ಸಂಬಂಧ ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಥವಾ ಹಿರಿಯ ಅಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡಿಲ್ಲ ಎಂದು ಪ್ರತಿಭಟನಾಕರರು ಆರೋಪಿಸಿದರು.
ಖಾಸಗಿ ಬಸ್ ಮಾಲೀಕರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಪಡೆದುಕೊಂಡಿರುವ ಕಾಂಟ್ರ್ಯಾಕ್ಟ್ ಕ್ಯಾರೇಜ್ ಒಪ್ಪಂದದ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ. ಬೆಳಗಾವಿ-ಹುಬ್ಬಳ್ಳಿ, ಬೆಳಗಾವಿ ವಿಜಾಪುರ ವಾಯಾ ಯರಗಟ್ಟಿ, ಬೆಳಗಾವಿ- ಧಾರವಾಡ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ. ಕಾರಣ ಕಾನೂನು ಬಾಹಿರ ಕಾರ್ಯಾಚರಣೆ ಹಾಗೂ ಕಾನೂನು ಬಾಹಿರ ಬಸ್ ನಿಲ್ದಾಣ ಸ್ಥಾಪನೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಎನ್.ಆರ್. ಕಂಗೋ, ನಾಗೇಶ ಸತೇರಿ, ಸಿ.ಎಸ್. ಬಿಡ್ನಾಳ, ಎಸ್.ವಿ. ರಾಜೇಶ, ಎಸ್.ಎಂ. ಜಾವತಿ, ಇಸ್ಮಾಯಿಲ್, ಜಿ.ಎಸ್. ಖಾಡೆ, ಎಸ್.ಎಂ. ಪಾಟೀಲ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.