ADVERTISEMENT

ನಿರಂತರ ಮಹಿಳಾ ದೌರ್ಜನ್ಯ: ಆತಂಕ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 9:15 IST
Last Updated 19 ಫೆಬ್ರುವರಿ 2011, 9:15 IST

ಬೆಳಗಾವಿ: ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಮಧ್ಯೆಯೂ ಮಹಿಳೆಯರು ದೌರ್ಜನ್ಯದಿಂದ ಮುಕ್ತರಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಸಬಲೀಕರಣ ಸಾಧಿಸಲು ಸಾಧ್ಯವಾಗಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ವಿನೋದಾ ನಟರಾಜ ವಿಷಾದಿಸಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಸೇವಾಮಿತ್ರ ಸಮಾಜಕಾರ್ಯ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಹಿಳಾ ಸಬಲೀಕರಣ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.‘ಕೌಟುಂಬಿಕ ಹಿಂಸೆ, ದೌರ್ಜನ್ಯ ಪ್ರಕರಣ ಸಂಖ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಹಿಳೆಯರ ಅಭಿವೃದ್ಧಿಗಾಗಿ ಸಲಹಾ ಕೇಂದ್ರ, ವಸತಿಗೃಹ ವ್ಯವಸ್ಥೆಯಂತಹ ಮಹತ್ವದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಹೇಳಿದರು.

ಮಾಜಿ ಉಪಮೇಯರ್ ಜ್ಯೋತಿ ಭಾವಿಕಟ್ಟಿ, ಪುರುಷರ ಸಹಕಾರವಿಲ್ಲದೇ ಮಹಿಳೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಮಹಿಳೆಯರು ತಮ್ಮ ಆತ್ಮಗೌರವ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಅಂಗನವಾಡಿ ಕಾರ್ಯಕರ್ತೆಯರ ತರಬೇತಿ ಕೇಂದ್ರದ ಪ್ರಾಚಾರ್ಯೆ ದಾನಮ್ಮ ಅಂಗಡಿ ಮಾತನಾಡಿ, ಮಹಿಳೆರಿಗೆ ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳ ಬಗೆಗೆ ವಿವರಿಸಿದರು. ಸಂಸ್ಥೆಯ ಅಧ್ಯಕ್ಷೆ ವೈಜಯಂತಿ ಚೌಗಲಾ ಅಧ್ಯಕ್ಷತೆ ವಹಿಸಿದ್ದರು. ಕಲ್ಯಾಣಾಧಿಕಾರಿ ಉಮಾಕಾಂತ, ಡಾ.ಪಟ್ಟಣ ಮತ್ತಿತರರಿದ್ದರು. ಕಿರಣ ಚೌಗಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ತಿಗಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.