ಬೆಳಗಾವಿ: ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಭ್ಯರ್ಥಿಗಳ ಹಾಗೂ ರಾಜಕೀಯ ಪಕ್ಷಗಳ ಖರ್ಚು- ವೆಚ್ಚದ ಬಗ್ಗೆ ತೀವ್ರ ನಿಗಾ ಇಡುಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮುನೀಷ್ ಮೌದ್ಗಿಲ್ ಖರ್ಚು -ವೆಚ್ಚ ನಿರ್ವಹಣೆ ಮಾಡುವ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದಿರುವ ವೆಚ್ಚ ನಿರೀಕ್ಷಕರು ಸೇರಿದಂತೆ ಸ್ಥಳೀಯ ಸಹಾಯಕ ವೆಚ್ಚ ನಿರ್ವಹಣಾ ಅಧಿಕಾರಿಗಳು, ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭ್ಯರ್ಥಿಯು ನಾಮಪತ್ರ ಸಲ್ಲಿಸಿದ ತಕ್ಷಣ ಅವರ ಖರ್ಚು- ವೆಚ್ಚದ ಲೆಕ್ಕವನ್ನು ಇಡಬೇಕಾಗುತ್ತದೆ. ಈ ಕುರಿತು ಸಂಬಂಧಿತ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.
ಚುನಾವಣಾಧಿಕಾರಿಗಳ ಅನುಮತಿ ಇಲ್ಲದೇ ಚುನಾವಣಾ ಕೆಲಸಕ್ಕೆ ಬಳಸುವ ವಾಹನಗಳನ್ನು ಜಪ್ತ್ ಮಾಡಬೇಕು. ಪ್ರತಿ ತಾಲ್ಲೂಕಿನಲ್ಲಿರುವ ಪೆಟ್ರೋಲ್ ಬಂಕ್ಗಳಲ್ಲಿ ಅತೀಯಾದ ವ್ಯವಹಾರ ಆದ ಬಗ್ಗೆಯೂ ಗಮನ ಹರಿಸಬೇಕು. ಬಾರ್ ಮತ್ತು ಸಾರಾಯಿ ಅಂಗಡಿಗಳಲ್ಲಿ ಮಾರಾಟವಾಗುವ ಪ್ರಮಾಣದ ಬಗ್ಗೆಯೂ ನಿಗಾ ಇಡಬೇಕು ಎಂದರು.
ಅಕ್ರಮ ಮದ್ಯ ಮಾರಾಟ, ಸಾಗಣೆ ತಡೆಯಲು ಈಗಾಗಲೇ 41 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ ಪ್ರಕರಣಗಳು ವರದಿಯಾದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಮೌದ್ಗಿಲ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ ಹಾಗೂ ಹೊರರಾಜ್ಯಗಳಿಂದ ಬಂದ 10 ಜನ ವೆಚ್ಚ ನಿರೀಕ್ಷಕರು, ಅಬಕಾರಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.