ADVERTISEMENT

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೂಳೀಪಟ: ದಿನೇಶ್‌ ಗುಂಡೂರಾವ್‌ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 13:40 IST
Last Updated 18 ಡಿಸೆಂಬರ್ 2018, 13:40 IST
   

ಬೆಳಗಾವಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರನ್ನೇ ಯಾರು ಎಂದು ಅವರ ಪಕ್ಷದವರೇ ಕೇಳುವ ಪರಿಸ್ಥಿತಿ ಲೋಕಸಭಾ ಚುನಾವಣೆ ಮುಗಿದ ನಂತರ ಬರಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವ್ಯಂಗ್ಯವಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೂಳೀಪಟವಾಗಿದೆ. ಲೋಕಸಭಾ ಚುನಾವಣೆಯಲ್ಲೂ ಇದು ಪುನರಾವರ್ತನೆಯಾಗಲಿದೆ ಎಂದು ಭವಿಷ್ಯ ನುಡಿದರು.

ಅದಕ್ಕಾಗಿ ಯಡಿಯೂರಪ್ಪ ಅವರು ಹೇಗಾದರೂ ಸರಿ ಸಮ್ಮಿಶ್ರ ಸರ್ಕಾರ ಉರುಳಿಸಿ, ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕನಸು ಕಾಣುತ್ತಿದ್ದಾರೆ. ಏಕೆಂದರೆ ಲೋಕಸಭೆ ಚುನಾವಣೆ ಮುಗಿದ ನಂತರ ತಮ್ಮನ್ನು ಪಕ್ಷದಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಬಹುದೆನ್ನುವ ಭಯ ಅವರನ್ನು ಕಾಡುತ್ತಿದೆ ಎಂದು ಹೇಳಿದರು.

ADVERTISEMENT

ಲಿಂಗಾಯತ– ನಿಲುವು ಇಲ್ಲ;

‘ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಿಂದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಯಾವುದೇ ಹಾನಿಯಾಗಿಲ್ಲ. ಹಿಂದಿನ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಮತ ಗಳಿಕೆ ಏರಿಕೆಯಾಗಿದೆ. ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳದಿರಲು ನಾವು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.

ಜನರಲ್ಲಿ ಪರ– ವಿರೋಧ ಅಭಿಪ್ರಾಯವಿರಬಹುದು. ಕಾಂಗ್ರೆಸ್‌ ಯಾವುದೇ ನಿಲುವು ತೆಗೆದುಕೊಳ್ಳುವುದಿಲ್ಲ. ಅದು ಸಮುದಾಯಕ್ಕೆ ಸಂಬಂಧಿಸಿದ್ದಾಗಿದ್ದು, ಸಮುದಾಯದ ಮುಖಂಡರೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸ್ಥಾನ ಹೊಂದಾಣಿಕೆ:

ಸಚಿವ ಸಂಪುಟ ವಿಸ್ತರಣೆಯಾದ ನಂತರ ಲೋಕಸಭಾ ಚುನಾವಣೆಯತ್ತ ಗಮನ ಕೇಂದ್ರೀಕರಿಸಲಾಗುವುದು. ಸಮ್ಮಿಶ್ರ ಸರ್ಕಾರದ ಪಾಲುದಾರವಾಗಿರುವ ಜೆಡಿಎಸ್‌ ಜೊತೆ ಸ್ಥಾನ ಹೊಂದಾಣಿಕೆ ಕುರಿತು ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಪರವಾಗಿಲ್ಲ. ಅಖಂಡ ಕರ್ನಾಟಕದಲ್ಲಿ ನಮಗೆ ನಂಬಿಕೆ ಇದೆ. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದ್ದೇವೆ. ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಕೆಲವು ಪ್ರಮುಖ ಇಲಾಖೆಗಳನ್ನು ಕೂಡ ಸ್ಥಳಾಂತರ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.

8 ಲಕ್ಷ ನೋಂದಣಿ:

‘ಶಕ್ತಿ’ ಅಭಿಯಾನದಡಿ ಬೂತ್‌ ಮಟ್ಟದ ಕಾರ್ಯಕರ್ತರ ಮೊಬೈಲ್‌ ಸಂಖ್ಯೆ ನೋಂದಣಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ 2 ತಿಂಗಳ ಸಮಯದಲ್ಲಿ ಸುಮಾರು 8 ಲಕ್ಷ ಕಾರ್ಯಕರ್ತರ ನೋಂದಣಿ ಮಾಡಲಾಗಿದೆ. ಈ ಮೂಲಕ ಕೆಪಿಸಿಸಿ ಹಾಗೂ ಎಐಸಿಸಿ ನಾಯಕರು ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿ ಇರಲು ಸಾಧ್ಯವಾಗಲಿದೆ. ಸಲಹೆ, ಸೂಚನೆಗಳನ್ನು ನೀಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮುಖಂಡರಾದ ಎಸ್‌.ಆರ್‌. ಪಾಟೀಲ ಸೇರಿದಂತೆ ಹಲವು ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.