ಬೆಳಗಾವಿ: ‘ಪ್ರವಾಹ ಹಾಗೂ ಮಳೆಯಿಂದ ಮನೆ ಕಳೆದುಕೊಂಡವರಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಶೀಘ್ರವೇ ₹ 92,100 ಪರಿಹಾರ ಕೊಡಲಾಗುವುದು’ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ಇಲ್ಲಿನ ಖಾಸಬಾಗದ ಸಾಯಿ ಭವನದಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ವಿವಿಧೆಡೆ ಪ್ರವಾಹದಿಂದ ಸಾವಿರಾರು ಮನೆಗಳು ಕುಸಿದಿವೆ. ಹೀಗಾಗಿ, ಜನರಿಗೆ ವಸತಿಯ ಅಗತ್ಯತೆ ಇದೆ. ರಾಜ್ಯ ಸರ್ಕಾರದಿಂದಲೂ ಪರಿಹಾರ ಕೊಡಲಾಗುವುದು’ ಎಂದರು.
‘ಬಸವ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆಗಳಲ್ಲಿ ಹೊಸ ಮನೆಗಳನ್ನು ಕಟ್ಟಿಸಿಕೊಡಲಾಗುವುದು. ಮನೆ ಕಳೆದುಕೊಂಡಿರುವವರು ದಾಖಲಾತಿಗಳನ್ನು ನೀಡಲೇಬೇಕು ಎಂದು ಅಧಿಕಾರಿಗಳು ಕೇಳುವುದಿಲ್ಲ. ನೇರವಾಗಿ ಆಯಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಸರ್ಕಾರದ ಬಳಿ ಜನರ ಮಾಹಿತಿ ಇದ್ದೇ ಇರುತ್ತದೆ. ಸಂತ್ರಸ್ತರು ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದರು.
ಸಂತ್ರಸ್ತರೊಂದಿಗೆ ಚರ್ಚೆ:ಇದಕ್ಕೂ ಮುಂಚೆ ಸಂತ್ರಸ್ತರನ್ನು ಭೇಟಿ ಮಾಡಿ, ‘ಕೇಂದ್ರದಲ್ಲಿ ಊಟ, ಉಪಹಾರ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ವಿಚಾರಿಸಿದರು. ಸರ್ಕಾರದಿಂದ ಅಗತ್ಯ ಸೌಕರ್ಯ ಒದಗಿಸಲಾಗುವುದು. ಕೆಲವು ದಿನಗಳವರೆಗೆ ಮಾತ್ರ ಸಮಸ್ಯೆಯಾಗಲಿದ್ದು, ಧೈರ್ಯದಿಂದ ಇರಿ’ ಎಂದು ಆತ್ಮಸ್ಥೈರ್ಯ ತುಂಬಿದರು. ಆಹಾರ ಧಾನ್ಯ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಿತರಿಸಿದರು.
ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.