ಬೆಳಗಾವಿ: ಪ್ರಕರಣವೊಂದರಲ್ಲಿ ಆರೋಪಿಗಳಿಗೆ ದೈಹಿಕ ಹಿಂಸೆ ನೀಡಿ, ದುರ್ವರ್ತನೆ ತೋರಿದ ಆರೋಪದ ಮೇಲೆ ಗ್ರಾಮೀಣ ಠಾಣೆಯ ಮೂವರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಗೋವಿಂದ ಪೂಜಾರಿ, ನಾರಾಯಣ ಚಿಪ್ಪಲಕಟ್ಟಿ ಹಾಗೂ ಚನ್ನಪ್ಪ ಹುಣಶ್ಯಾಳ ಅಮಾನತುಗೊಂಡವರು. ಮಾರ್ಚ್ 13ರಂದು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ದುರ್ವರ್ತನೆ ತೋರಲಾಗಿದೆ. ಬೆಳಿಗ್ಗೆಯಿಂದ ರಾತ್ರಿವರೆಗೆ ಠಾಣೆಯಲ್ಲಿ ಇಟ್ಟುಕೊಂಡು ದೈಹಿಕ ಹಿಂಸೆ ನೀಡಿರುವುದು ಸಾಬೀತಾಗಿದ್ದರಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆ ವೇಳೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಹೇಳಿಕೆ, ಠಾಣೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ದೃಶ್ಯಗಳ ಪರಿಶೀಲನೆ, ಆರೋಪಿಗಳ ಹೇಳಿಕೆ ಆಧಾರದ ಮೇಲೆ ತನಿಖೆ ನಡೆಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಎಂಇಎಸ್ನ ಮೂವರು ಕನ್ನಡಿಗರನ್ನು ಅವಮಾನಿಸುವ ವಾಟ್ಸ್ ಆ್ಯಪ್ ಸ್ಟೇಟಸ್ ಅನ್ನು ಇಟ್ಟುಕೊಂಡಿದ್ದರು. ಇದನ್ನು ನಮ್ಮ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದರು. ಅವರನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ನಾಡು–ನುಡಿ ಹಿತ ಕಾಯುವ ಕೆಲಸ ಮಾಡಿದ್ದರು. ಅವರಿಗೆ ಈಗ ಅಮಾನತು ಶಿಕ್ಷೆ ಕೊಟ್ಟಿರುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
‘ಈ ಸಂಬಂಧ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ಅವರ ಅಮಾನತು ಆದೇಶ ವಾಪಸ್ ಪಡೆಯಬೇಕು. ಎಂಇಎಸ್ನವರ ಪುಂಡಾಟಕ್ಕೆ ಕಡಿವಾಣ ಹಾಕುವ ಪೊಲೀಸರಿಗೆ ನೈತಿಕ ಸ್ಥೈರ್ಯ ತುಂಬಬೇಕು’ ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.