ನಿಪ್ಪಾಣಿ: ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಘಟನೆಗಳು ತಾಲ್ಲೂಕಿನ ಕೊಗನೋಳಿ ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ನಡೆದಿದ್ದು, ₹3,96,770 ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮೊದಲನೇ ಘಟನೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ₹2,56,770 ಹಣ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಕಾಗಲ್ ಪಟ್ಟಣದ ಮಹೇಶ ಗಡೇಕರ ತಮ್ಮ ಕಾರಿನಲ್ಲಿ ರಾಜ್ಯಕ್ಕೆ ಬರುತ್ತಿರುವ ಸಂದರ್ಭದಲ್ಲಿ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಹಣ ಕಾಣಿಸಿದೆ.
ಮತ್ತೊಂದು ಘಟನೆಯಲ್ಲಿ ₹1.40 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ. ದಶರಥ ಕುಟ್ರೆ ಎಂಬುವವರು ಕೊಲ್ಹಾಪೂರದಿಂದ ನಗರದ ಮೂಲಕ ಚಂದಗಡಕ್ಕೆ ಕಾರಿನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಚೆಕ್ಪೋಸ್ಟ್ ಬಳಿ ಅವರನ್ನು ತಡೆದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಹಣ ಸಿಕ್ಕಿದೆ.
ಎರಡೂ ಘಟನೆಗಳಲ್ಲಿ ಯಾವುದೇ ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿರುವುದರಿಂದ ವಶಪಡಿಸಿಕೊಳ್ಳಲಾಗಿದೆ. ಚುನಾವಣಾಧಿಕಾರಿ ತಹಶೀಲ್ದಾರ್ ಮುಜಫ್ಫರ್ ಬಳಿಗಾರ, ಸಿಪಿಐ ಬಿ.ಎಸ್. ತಳವಾರ, ಬೆನಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಮಲ್ಲಪ್ಪಾ ದತ್ತವಾಡೆ, ಸಿದ್ನಾಲ ಪಿಡಿಒ ಶಿವಾನಂದ ತೇಲಿ, ಕಾರ್ಯನಿರತ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.