ADVERTISEMENT

ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದ ಆರಗ

‘ಭ್ರಷ್ಟರನ್ನು ಮಟ್ಟಹಾಕುವವರೆಗೆ ವಿಶ್ರಾಂತಿ ಇಲ್ಲ’

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 10:05 IST
Last Updated 7 ಜುಲೈ 2022, 10:05 IST
ನಿಪ್ಪಾಣಿಯಲ್ಲಿ ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್‌ ಠಾಣೆ ಉದ್ಘಾಟಿಸಿದರು
ನಿಪ್ಪಾಣಿಯಲ್ಲಿ ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್‌ ಠಾಣೆ ಉದ್ಘಾಟಿಸಿದರು   

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ‘‍‍‍ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತರಲಾಗಿದೆ. ಭ್ರಷ್ಟರನ್ನು ಮಟ್ಟಹಾಕುವವರೆಗೂ ವಿಶ್ರಮಿಸುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ‘ 545 ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣದ ತನಿಖೆ ಯಾವುದೇ ಹಸ್ತಕ್ಷೇಪ ಇಲ್ಲದೆ, ಪಾರದರ್ಶಕವಾಗಿ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ’ ಎಂದರು.

‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿಐಡಿ ತನಿಖೆಗೆ ವಹಿಸಲಾದ ಪ್ರಕರಣಗಳಲ್ಲಿ ಎಫ್‌ಐಆರ್‌ ಕೂಡ ದಾಖಲಿಸಿಲ್ಲ. ಎಫ್‌ಐಆರ್‌ ಮಾಡಿದ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ ಹಾಕಿಲ್ಲ. ಆದರೆ, ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ನಡೆಸುತ್ತಿದ್ದರೂ ಅದನ್ನು ಸಹಿಸಿಕೊಳ್ಳಲಾಗುತ್ತಿಲ್ಲ’ ಎಂದರು.

ADVERTISEMENT

ಆಗ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದಲ್ಲಿದ್ದರೂ ಕಡ್ಲೆಪುರಿ ತಿನ್ನುತ್ತಿದ್ದರಾ? ಎಂಬ ಸಿದ್ದರಾಮ್ಯಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ, ‘ವಿರೋಧ ಪಕ್ಷದ ಜವಾಬ್ದಾರಿಯಿಂದ ನಾವು ಸಾಕಷ್ಟು ಪ್ರಶ್ನೆ ಮಾಡಿದ್ದೇವೆ. ಆದರೆ, ಸಿದ್ದರಾಮಯ್ಯ ಅವರೇ ಎಲ್ಲವನ್ನೂ ಮುಚ್ಚಿಹಾಕಿದರು. ಒಂದು ವೇಳೆ ನಾವು ಕೇಳದೇ ಇದ್ದರೂ ತನಿಖೆ ಮಾಡಿಸಬೇಕಾದುದು ಸಿದ್ದರಾಮಯ್ಯ ಅವರ ಜವಾಬ್ದಾರಿ ಆಗಿರಲಿಲ್ಲವೇ’ ಎಂದು ಖಾರವಾಗಿ ಉತ್ತರಿಸಿದರು.

‘ಈ ಪ್ರಕರಣವನ್ನು ತನಿಖೆಗೆ ಒಳಪಡಿಸಿದ್ದು ನಾವೇ. ಆದರೆ, ನಮಗೆ ರಾಜೀನಾಮೆ ನೀಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ ನಾಯಕರಿಗೆ ಏನು ನೈತಿಕತೆ ಇದೆ?’ ಎಂದೂ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.