ಬೆಳಗಾವಿ: ವೈದ್ಯಕೀಯ ಸೀಟುಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದ ಆರ್ಪಿಡಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
‘ಬಡ ಹಾಗೂ ಪ್ರತಿಭಾವಂತರಿಗೆ ವೈದ್ಯಕೀಯ ಸೀಟುಗಳು ಸಿಗಲೆಂಬ ಉದ್ದೇಶದಿಂದ ಸಿಇಟಿ ನಡೆಸುವಂತೆ ಎಬಿವಿಪಿ ಹೋರಾಟ ಮಾಡಿತ್ತು. ಇದರ ಫಲವಾಗಿ ಸಿಇಟಿ ವ್ಯವಸ್ಥೆಯೂ ಜಾರಿಯಾಗಿದೆ. ಆದರೆ, ಕೆಲವು ವೈದ್ಯಕೀಯ ಕಾಲೇಜುಗಳವರು ಸೀಟ್ ಬ್ಲಾಕಿಂಗ್ ದಂಧೆಯನ್ನು ನಡೆಸುತ್ತಿರುವುದು ಇತ್ತೀಚೆಗೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಬಹಿರಂಗಗೊಂಡಿದೆ. ಅಕ್ರಮಗಳಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
‘ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಆದರೆ, ಕೆಲವು ಸಂಸ್ಥೆಗಳು ಹಣಕ್ಕಾಗಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ನೀಡುತ್ತಿಲ್ಲ. ಇದರಲ್ಲಿ ದೊಡ್ಡ ದಂಧೆ ನಡೆಯುತ್ತಿದೆ. ಇಂತಹ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪ್ರತಿಭಾವಂತರಿಗೆ ನ್ಯಾಯ ದೊರೆಯಬೇಕು. ಇದಕ್ಕಾಗಿ ಪ್ರಕ್ರಿಯೆಯು ಪಾರದರ್ಶಕವಾಗಿ ಜರುಗುವಂತೆ ನೋಡಿಕೊಳ್ಳಬೇಕು. ಸರ್ಕಾರವು ಯಾವುದೇ ಒತ್ತಡಕ್ಕೆ ಮಣಿಯಬಾರದು’ ಎಂದು ನಗರ ಸಂಘಟನಾ ಕಾರ್ಯದರ್ಶಿ ಸುರೇಶ ಚಂಗೋನಿ ಆಗ್ರಹಿಸಿದರು.
ನಗರ ಕಾರ್ಯದರ್ಶಿ ಕಿರಣ ದುಕಾನದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.