ಬೆಳಗಾವಿ: ‘ಸರ್ಕಾರದ ಆದೇಶದಂತೆ ವಿವಿಧ ಇಲಾಖೆ ಹಾಗೂ ನಿಗಮಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವ ಜೊತೆಗೆ ಮೂಲಸೌಕರ್ಯವನ್ನೂ ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಇಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಹೆಮ್ಮೆಯ ಪ್ರತೀಕ. ಅಧಿವೇಶನ ಹೊರತುಪಡಿಸಿ ಅದು ಬಳಕೆ ಆಗುತ್ತಿರಲಿಲ್ಲ. ಆದರೆ, ಸರ್ಕಾರ ಬಾಡಿಗೆ ಕಟ್ಟಡದಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಲು ಆದೇಶಿಸಿದೆ. ಕಚೇರಿಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುವುದು’ ಎಂದು ಹೇಳಿದರು.
‘ಸಾರಿಗೆ ಸಂಸ್ಥೆಯು ಸಮಯಕ್ಕೆ ಅನುಗುಣವಾಗಿ ಬಸ್ಗಳ ವ್ಯವಸ್ಥೆ ಮಾಡಬೇಕು. ಸ್ಥಳಾಂತರದ ಬಳಿಕ ಎಲ್ಲರೂ ವಾತಾವರಣಕ್ಕೆ ಹೊಂದಿಕೊಂಡು ಕೆಲಸ ನಿರ್ವಹಿಸಬೇಕು. ಕುರ್ಚಿ ಮತ್ತು ಟೇಬಲ್ಗಳ ಖರೀದಿಗೆ ಅವಕಾಶವಿಲ್ಲ. ಈಗಿರುವ ವಸ್ತುಗಳನ್ನು ಬಳಸಿಕೊಳ್ಳಬೇಕು. ಲೋಕೋಪಯೋಗಿ ಇಲಾಖೆಯವರು ಸುಸಜ್ಜಿತ ಕ್ಯಾಂಟಿನ್ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಸೂಚಿಸಿದರು.
‘ಸಿಬ್ಬಂದಿಗೆ ಹೆಲ್ತ್ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಈಗಾಗಲೇ ಅಲ್ಲಿ ಅಂಚೆ ಕಚೇರಿ ಇದೆ. ಬ್ಯಾಂಕ್ ಹಾಗೂ ಎಟಿಎಂ ವ್ಯವಸ್ಥೆ ಕೂಡ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ‘ಕಚೇರಿಗಳನ್ನು ನೀಡಿದ ಬಳಿಕ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.