ADVERTISEMENT

ಅಮಿತ್ ಶಾ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಎಡಿಜಿಪಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 14:31 IST
Last Updated 12 ಜನವರಿ 2021, 14:31 IST
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣವನ್ನು ಎಡಿಜಿಪಿ ಮಂಗಳವಾರ ಪರಿಶೀಲಿಸಿದರು
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣವನ್ನು ಎಡಿಜಿಪಿ ಮಂಗಳವಾರ ಪರಿಶೀಲಿಸಿದರು   

ಬೆಳಗಾವಿ: ‘ಮಾದಕ ವಸ್ತುಗಳು ಸೇರಿದಂತೆ ಯಾವುದೇ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ತಲೆ ದಂಡ ಮಾಡಲಾಗುವುದು’ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಂಚಾರ ನಿರ್ವಹಣೆ ಎಲ್ಲ ಮಹಾನಗರಗಳಲ್ಲಿರುವ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಕೆಲಸ ಮಾಡಲಾಗುತ್ತಿದೆ. ಕೆಲವು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ. ಟ್ರಾಫಿಕ್ ಜಾಮ್‌ ‌ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ಈ ವರ್ಷ 10ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. ಅವರೆಲ್ಲರೂ ನೇಮಕವಾಗಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ಬಳಿಕ ಸಿಬ್ಬಂದಿ ಕೊರತೆ ಒಂದಷ್ಟು ನೀಗಲಿದೆ’ ಎಂದು ತಿಳಿಸಿದರು.

ADVERTISEMENT

ಪರಿಶೀಲನೆ: ನಂತರ ಅವರು, ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಳ್ಳಲಿರುವ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ನಡೆಯಲಿರುವ ಜಿಲ್ಲಾ ಕ್ರೀಡಾಂಗಣವನ್ನು ಪರಿಶೀಲಿಸಿದರು. ಭದ್ರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೊಲೀಸ್ ಅಧಿಕಾರಿಗಳು ಮತ್ತು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.