ಬೆಳಗಾವಿ: ‘ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಆಹಾರ ಪದಾರ್ಥಗಳನ್ನು ತಕ್ಷಣ ವಿತರಣೆ ಮಾಡಬೇಕು’ ಎಂದು ಎಐಡಿಎಸ್ಒ ಜಿಲ್ಲಾ ಸಂಘಟನಾಕಾರ ಮಹಾಂತೇಶ ಬಿಳ್ಳೂರ ಒತ್ತಾಯಿಸಿದ್ದಾರೆ.
‘ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಕೊರೊನಾದಿಂದಾಗಿ ಜನಸಾಮಾನ್ಯರು ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಒಂದೆಡೆ ಉದ್ಯೋಗಗಳು ಸಿಗುತ್ತಿಲ್ಲ. ಇನ್ನೊಂದೆಡೆ ಇರುವ ಉದ್ಯೋಗಗಳನ್ನು ಕಳೆದುಕೊಂಡು ಕಾರ್ಮಿಕರು ಮನೆಗಳಲ್ಲೇ ಉಳಿದಿದ್ದು, ಎರಡು ಹೊತ್ತಿನ ಊಟಕ್ಕಾಗಿ ಪರಿತಪಿಸುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಸರ್ಕಾರದಿಂದ ಬಿಸಿಯೂಟದ ಬದಲಿಗೆ ಆಹಾರ ಧಾನ್ಯಗಳನ್ನು ನೀಡಿದರೆ ತಕ್ಕ ಮಟ್ಟಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದಾರೆ.
‘ಆಹಾರ ಧಾನ್ಯ ಗೋದಾಮುಗಳಲ್ಲಿದ್ದರೂ ವಿತರಿಸದಿರುವುದು ಖಂಡನೀಯ. ಇದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರವು ಸಂವೇದನಾರಹಿತ ಧೋರಣೆ ಬಿಟ್ಟು, ಕೂಡಲೇ ಎಚ್ಚೆತ್ತುಕೊಂಡು ಗೋದಾಮಿನಲ್ಲಿರುವ ಧಾನ್ಯಗಳನ್ನು ಮಕ್ಕಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.