ನಿಪ್ಪಾಣಿ: ‘ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರಾಜ್ಯದಲ್ಲಿ ಸುಮಾರು 25 ಸಂಸದರನ್ನು ಚುನಾಯಿಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಚಿವ ಸ್ಥಾನ ಸಿಕ್ಕ ನಂತರ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ನಂತರ ಇಲ್ಲಿನ ಮರಾಠಾ ಮಂಡಳ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
‘ಇನ್ನು ಮುಂದೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನಾವಣೆಯತ್ತ ಎಲ್ಲರೂ ಗಮನ ಹರಿಸಿ, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತರಲು ಎಲ್ಲರೂ ಪ್ರಯತ್ನಿಸಬೇಕು. ಅಧಿಕಾರಕ್ಕೆ ಬಂದ ತಕ್ಷಣವೇ 5 ಭರವಸೆಗಳನ್ನು ಈಡೇರಿಸಲಾಗಿದೆ. ಬಿಜೆಪಿಯವರು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಇದು ಎಲ್ಲರಿಗೂ ಗೊತ್ತಾಗಿದೆ. ನಮ್ಮನ್ನು ಬಿಟ್ಟು ಹೋದವರು ನಮ್ಮೊಂದಿಗೆ ಮತ್ತೆ ಬರುತ್ತಾರೆ. ಮುಂಬರುವ ಚುನಾವಣೆಗಳಲ್ಲಿ ಗೆಲುವು ನಮ್ಮದೆ ಆಗಲಿದೆ’ ಎಂದರು.
ಮಾಜಿ ಸಚಿವ ವೀರಕುಮಾರ ಪಾಟೀಲ ಮಾತನಾಡಿದರು. ವಿವಿಧ ಸಂಘಟನೆಗಳಿಂದ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ಪಂಕಜ ಪಾಟೀಲ, ರಾಜೇಶ ವಡ್ಡರ, ರಾಜೇಂದ್ರ ವಡ್ಡರ, ಸುಮಿತ್ರಾ ಉಗಳೆ, ಧನಾಜಿ ಚವಾಣ, ರಾಜೇಂದ್ರ ಚವ್ಹಾಣ, ಅವಧೂತ ಗುರವ, ಮೊದಲಾದವರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.