ಬೆಳಗಾವಿ: ‘ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿನ ತಾರತಮ್ಯಗಳನ್ನು ಹೋಗಲಾಡಿಸಲು ಶ್ರಮಿಸಿದರು. ದೀನದಲಿತರು ಮತ್ತು ಬಡವರ ಉದ್ದಾರಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಹೋರಾಡಿದರು’ ಎಂದು ಗುಲ್ಬರ್ಗ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಎಚ್.ಜಿ. ಪೋತೆ ಸ್ಮರಿಸಿದರು.
ವಿಟಿಯುನಲ್ಲಿ ಸೋಮವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಅವರು ಉತ್ತಮ ಅರ್ಥಶಾಸ್ತ್ರಜ್ಞ, ಶಿಕ್ಷಣಶಾಸ್ತ್ರಜ್ಞ ಹಾಗೂ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಯುವಜನರು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಕರಿಸಿದ್ದಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಓದಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ವಿಟಿಯು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸ್ನಾತಕೋತ್ತರ ಕೇಂದ್ರಗಳಲ್ಲಿ ವ್ಯಾಸಾಂಗ ಮಾಡಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪಂಗಡದ 18 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ, 2017–18ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದ 25 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಯಿತು.
ಕುಲಸಚಿವ ಪ್ರೊ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಪ್ರಾದೇಶಿಕ ಕಚೇರಿ ನಿರ್ದೇಶಕ ಆನಂದ ಶಿವಾಪುರ, ಕಾರ್ಯಕ್ರಮ ಸಂಯೋಜಕ ಪ್ರಹ್ಲಾದ ರಾಥೋಡ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.