ಬೆಳಗಾವಿ: ‘ಕೋವಿಡ್ನಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ನೀಡಬೇಕು. ಸಮೀಕ್ಷೆಗೆ ನಿಯೋಜನೆಗೊಂಡಿರುವ ನಮಗೆ ಸುರಕ್ಷಾ ಪರಿಕರಗಳನ್ನು ಒದಗಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಂದಾ ನೇವಗಿ ಮಾತನಾಡಿ, ‘ಕೋವಿಡ್ ಸಮೀಕ್ಷೆ ಮತ್ತು ಜನರ ಆರೋಗ್ಯ ರಕ್ಷಣೆಗೆ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸುರಕ್ಷತೆ ಇಲ್ಲವಾಗಿದೆ. ಕೋವಿಡ್ನಿಂದ ಸಾವಿಗೀಡಾದವರ ಕುಟುಂಬದವರಿಗೆ ₹ 30 ಲಕ್ಷ ಪರಿಹಾರ ಕಲ್ಪಿಸುವ ಭರವಸೆ ಇನ್ನೂ ಈಡೇರಿಲ್ಲ. ಸರ್ಕಾರವು ನಮ್ಮ ಮರೆತಿದೆ’ ಎಂದು ದೂರಿದರು.
‘ತಾಲ್ಲೂಕಿನ ನಾಲ್ವರು ಕಾರ್ಯಕರ್ತೆಯರಿಗೆ ಈಚೆಗೆ ಕೋವಿಡ್ ದೃಢಪಟ್ಟಿದೆ. ಅವರ ಮನೆಯವರಿಗೂ ಸೋಂಕು ತಗುಲಿದೆ. ಆ ಕುಟುಂಬದವರ ನೆರವಿಗೆ ಇಲಾಖೆ ಬಂದಿಲ್ಲ. ಸರ್ಕಾರ ನಮ್ಮ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕೆಲಸ ಬಹಿಷ್ಕರಿಸಿ ಮುಷ್ಕರ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.