ADVERTISEMENT

ಅಧಿಕೃತ ಆಹ್ವಾನ ನೀಡಿದರೆ ಕಾಂಗ್ರೆಸ್ ಸೇರ್ಪಡೆ: ಅಶೋಕ ಪೂಜಾರಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 13:37 IST
Last Updated 16 ಅಕ್ಟೋಬರ್ 2021, 13:37 IST
ಅಶೋಕ ಪೂಜಾರಿ
ಅಶೋಕ ಪೂಜಾರಿ   

ಸಾವಳಗಿ: ‘ಅಧಿಕೃತ ಆಹ್ವಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ಧ’ ಎಂದು ಮುಖಂಡ ಅಶೋಕ ಪೂಜಾರಿ ತಿಳಿಸಿದರು.

ಗ್ರಾಮದಲ್ಲಿ ತಮ್ಮ ಬೆಂಬಲಿಗರನ್ನು ಶನಿವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಖುದ್ದಾಗಿ ಭೇಟಿ ನೀಡಿ ಆಹ್ವಾನಿಸಿದ್ದರು. ಆಗ ನಾನು ಕಾಲಾವಕಾಶ ಕೋರಿದ್ದೆ’ ಎಂದರು.

‘ನಂತರ ಬೆಂಗಳೂರಲ್ಲಿ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಆದರೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಅಧಿಕೃತವಾಗಿ ದಿನಾಂಕ ನಿಗದಿಪಡಿಸಿ ಆಹ್ವಾನ ನೀಡಿದರೆ ಸೇರಲು ಸಿದ್ಧವಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿದ್ದೇನೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರೆ ತಪ್ಪಿಲ್ಲ ಎಂದು ಬೆಂಬಲಿಗರು ತಿಳಿಸಿದ್ದಾರೆ. ಹೀಗಾಗಿ, ಸೇರ್ಪಡೆ ಬಗ್ಗೆ ಚಿಂತಿಸುತ್ತಿದ್ದೇನೆ. ಮತದಾರರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ನ.30ರವರೆಗೆ ಸೌಹಾರ್ದ ಭೇಟಿ ಮತ್ತು ಜನಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದೇನೆ. ಪ್ರತಿ ಗ್ರಾಮಕ್ಕೂ ತೆರಳಿ ಬೆಂಬಲಿಗರು ಹಾಗೂ ಮತದಾರರನ್ನು ಭೇಟಿ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.