ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಮುಖಾಮುಖಿಯಾದರು.
ಲಾಂಜ್ನಲ್ಲಿ ಒಂದೇ ಸೋಫಾದಲ್ಲಿ ಕುಳಿತು ಉಭಯ ಕುಶಲೋಪರಿ ವಿಚಾರಿಸಿದ ಅವರು, ಗ್ರಾಮ ಪಂಚಾಯ್ತಿ ಸೇರಿದಂತೆ ಸಾಲು ಸಾಲು ಚುನಾವಣೆಗಳು ಬಂದಿರುವ ಬಗ್ಗೆ ಪ್ರಸ್ತಾಪಿಸಿ ಔಪಚಾರಿಕವಾಗಿ ಮಾತನಾಡಿದರು.
ಇಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಮತ್ತು ಶಾಸಕ ಸಿದ್ದು ಸವದಿ ವಿರುದ್ಧ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ ಹಾಗೂ ಬಿ.ವೈ. ವಿಜಯೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಆರ್. ಅಶೋಕ್ ಮೊದಲಾದವರು ಇದ್ದರು.
ಹಾಲಿ–ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಸೇರಿದಂತೆ ಮೂವತ್ತು ರಾಜಕೀಯ ನಾಯಕರು ಒಂದೇ ವಿಮಾನದಲ್ಲಿ ಸಂಜೆ ಬೆಂಗಳೂರಿಗೆ ಪ್ರಯಾಣಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.