ADVERTISEMENT

ಭಿನ್ನಾಭಿಪ್ರಾಯ ಬಿಡುವಂತೆ ಪಕ್ಷದ ನಾಯಕರಿಗೆ ಸೂಚನೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 14:03 IST
Last Updated 12 ಏಪ್ರಿಲ್ 2022, 14:03 IST
 ಶಾಸಕ ಬಿ.ಎಸ್. ಯಡಿಯೂರಪ್ಪ
ಶಾಸಕ ಬಿ.ಎಸ್. ಯಡಿಯೂರಪ್ಪ   

ಬೆಳಗಾವಿ: ‘ಜಿಲ್ಲೆಯಲ್ಲಿ ಪಕ್ಷದ ನಾಯಕರಲ್ಲಿ ಸಣ್ಣ‍ಪುಟ್ಟ ಭಿನ್ನಾಭಿಪ್ರಾಯಗಳಿದ್ದವು. ಅದರಲ್ಲಿ ಮುಚ್ಚು ಮರೆ ಏನಿಲ್ಲ. ಆದರೆ, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ18 ಕ್ಷೇತ್ರಗಳನ್ನೂ ಗೆಲ್ಲಬೇಕಿರುವುದರಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದೇವೆ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಜಿಲ್ಲೆಯ ಪ್ರಮುಖರೊಂದಿಗೆ ಇಲ್ಲಿ ಮಂಗಳವಾರ ನಡೆದ ಕೋರ್ ಕಮಿಟಿ ಸಭೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ಒನ್ ಟು ಒನ್ ಮಾತುಕತೆ ನಡೆಸಿದ್ದೇವೆ. ಮುಖಂಡರು ಅವರವರ ಅಭಿಪ್ರಾಯ ಹಂಚಿಕೊಂಡಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

‘ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಂಗಳಿಗೊಮ್ಮೆ ಬಂದು, ಚರ್ಚೆ ನಡೆಸುತ್ತೇವೆ. ಭಿನ್ನಾಭಿಪ್ರಾಯಗಳಿದ್ದಲ್ಲಿ ಹೋಗಲಾಡಿಸುತ್ತೇವೆ’ ಎಂದರು.

ADVERTISEMENT

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರ ಮನೆ ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರ ಜೊತೆಗೂಡಿ ಶಾಸಕರು ಸಕ್ರಿಯವಾಗಿ ಮಾಡಬೇಕು ಎಂದು ಸೂಚಿಸಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

‘ಬಹುತೇಕ ಕ್ಷೇತ್ರಗಳಲ್ಲಿ ಸಂಘಟನಾತ್ಮಕವಾಗಿ ಚೆನ್ನಾಗಿ ಕೆಲಸ ನಡೆದಿದೆ. ಒಂದೆರಡು ಕ್ಷೇತ್ರಗಳಲ್ಲಿ ಹಿಂದಿದ್ದೇವೆ. ಅಲ್ಲಿ ಚುರುಕಾಗಿ, ಉತ್ಸಾಹದಿಂದ ಸಂಘಟನೆ ಮಾಡುವಂತೆ ತಿಳಿಸಲಾಗಿದೆ. ಎಲ್ಲರೂ ವಿಶ್ವಾಸದಿಂದ ಮುನ್ನಡೆದರೆ ಮುಂದೆಯೂ ನಾವೆ ಅಧಿಕಾರ ಪಡೆಯಬಹುದು ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.