
ಬೈಲಹೊಂಗಲ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಮಹತ್ವದ ಹೆಜ್ಜೆಯಾಗಿದೆ. ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ರಾಜಯೋಗಿನಿ ಬ್ರಹ್ಮಕುಮಾರಿ ಬಿ.ಕೆ. ಪ್ರಭಾ ಅಕ್ಕನ ಸಾನ್ನಿಧ್ಯ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಪಾಲಕರ ಆದ್ಯ ಕರ್ತವ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಸ್.ಎಸ್. ಸಿದ್ದನ್ನವರ ಮಾತನಾಡಿ, ತಾಲ್ಲೂಕಿನಾದ್ಯಂತ 189 ಲಸಿಕೆ ಬೂತ್ ಸ್ಥಾಪಿಸಲಾಗಿದ್ದು, ನಾಲ್ಕು ಬಸ್ ನಿಲ್ದಾಣಗಳಲ್ಲಿ ಲಸಿಕೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು 36,772 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಎಸ್.ಎಸ್. ಮುತ್ನಾಳ ಪ್ರಾಸ್ತಾವಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಪುರಸಭೆ ಮಾಜಿ ಸದಸ್ಯ ರಾಜು ಜನ್ಮಟ್ಟಿ, ನೂಡಲ್ ಅಧಿಕಾರಿ ಡಾ. ಶಿವಲೀಲಾ ಶಿರೋಳ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಡಾ. ಮಹಾಂತೇಶ ಕಳ್ಳಿಬಡ್ಡಿ, ಮುಖ್ಯ ವೈದ್ಯಾಧಿಕಾರಿ ಡಾ. ರವಿ ಜಕನೂರ, ಆರೋಗ್ಯ ನಿರೀಕ್ಷಕ ಡಿ.ಎಸ್. ಝೆಂಡೇಕರ, ಇಲಾಖೆಯ ಮೇಲ್ವಿಚಾರಕ ಬಿ.ಜಿ. ಮನ್ನಪ್ಪನವರ, ಐಸಿಡಿಎಸ್ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಶಿಶುಗಳ ಪೋಷಕರು ಸೇರಿದಂತೆ ಸಾರ್ವಜನಿಕ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.