
ಗೋಕಾಕ: ‘ಬೇಸಿಗೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡುವಂತಿಲ್ಲ’ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಾಕೀತು ಮಾಡಿದರು.
ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಸೋಮವಾರ ನಡೆದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಿ’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
‘ಇದೀಗ ಆರಂಭವಾಗಿರುವ ಬೇಸಿಗೆ ಮೇ ತಿಂಗಳ ಅಂತ್ಯದವರೆಗೆ ಏರುತ್ತಲೇ ಇರುತ್ತದೆ. ಈ ಮೂರು ತಿಂಗಳ ಅವಧಿಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳು ನೀಗಾ ವಹಿಸಬೇಕು. ಎಲ್ಲಿ ಯಾವ ಸಮಸ್ಯೆಗಳು ಉದ್ಭವವಾಗಿವೆ, ಅವುಗಳ ಪರಿಹಾರಕ್ಕೆ ಅಗತ್ಯವಿರುವ ಕ್ರಮಗಳು ಯಾವುವು ಎಂಬುದರ ಕುರಿತು ಚಿಂತಿಸಬೇಕು. ಕುಡಿಯುವ ನೀರು ಪೂರೈಸಲು ಮೇಲಾಧಿಕಾರಿಗಳ ಜತೆ ಸಮನ್ವಯ ಸಾಧಿಸಬೇಕು. ಕೆಲವೆಡೆ ಪ್ರತಿ ವರ್ಷ ಕುಡಿಯುವ ನೀರಿನ ಹಾಹಾಕಾರ ಉಂಟಾಗುತ್ತದೆ. ಅಂಥ ಊರುಗಳನ್ನು ಮೊದಲೇ ಗುರುತಿಸಬೇಕು’ ಎಂದರು.
‘ಎಲ್ಲೆಲ್ಲಿ ಸಮಸ್ಯೆಗಳು ಆವರಿಸಬಹುದು ಎಂಬುದನ್ನು ಅಧಿಕಾರಿಗಳು ಪಟ್ಟಿ ತಯಾರಿಸಬೇಕು. ಜನರಿಗೆ ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಬೋರ್ವೆಲ್ಗಳನ್ನು ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ’ ಅವರು ಸೂಚಿಸಿದರು.
ಅಕ್ರಮ ತಡೆಯಿರಿ: ‘ಮದ್ಯ ಮಾರಾಟ ಅಕ್ರಮವಾಗಿ ನಡೆಯುತ್ತಿರುವ ವರದಿಗಳು ಬರುತ್ತಿವೆ. ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳು ಇದಕ್ಕೆ ತಡೆ ಹಾಕಬೇಕು. ಪರವಾನಗಿ ಪಡೆದವರು ಮಾತ್ರ ಮದ್ಯ ಮಾರಾಟ ಮಾಡಬೇಕು. ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಅನೇಕ ಸಮಸ್ಯೆಗಳು ಉದ್ಬವಿಸುತ್ತಿವೆ. ಕುಡಿತದಿಂದ ಅಪಘಾತಗಳು ಸಂಭವಿಸಬಹುದು. ಇದಕ್ಕೆಲ್ಲ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಕೊಳ್ಳಬೇಕು’ ಎಂದು ಶಾಸಕ ಸೂಚಿಸಿದರು.
ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ, ಗೋಕಾಕ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ, ಮೂಡಲಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೇರ್ಲೇಕರ, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು, ಮೂಡಲಗಿ ಹಾಗೂ ಗೋಕಾಕ ತಾಲ್ಲೂಕುಗಳ ಪಿಡಿಒಗಳು, ಗ್ರಾಮ ಆಡಳಿತ ಅಧಿಕಾರಿಗಳು, ಎಂಜಿನಿಯರ್ಗಳೂ ಇದ್ದರು.
‘ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಅವರ ಅಭ್ಯಾಸಕ್ಕೆ ಅನುಕೂಲವಾಗಲು ವಿದ್ಯುತ್ತನ್ನು ನಿರಂತರವಾಗಿ ಪೂರೈಕೆ ಮಾಡಬೇಕು’ ಎಂದು ಶಾಸಕ ಬಾಲಚಂದ್ರ ಒತ್ತಿ ಹೇಳಿದರು. ‘ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ಇದರಿಂದ ರೋಗಿಗಳಿಗೆ ಸಮಸ್ಯೆಗಳು ಆಗುತ್ತಿವೆ ಎಂದು ಸಾರ್ವಜನಿಕರಿಂದ ವ್ಯಾಪಕವಾದ ದೂರುಗಳು ಕೇಳಿಬರುತ್ತಿವೆ. ತಕ್ಷಣವೇ ಕರ್ತವ್ಯಕ್ಕೆ ಗೈರಾಗುವ ವೈದ್ಯರ ವಿರುದ್ಧ ಕ್ರಮಗಳನ್ನು ಕೈಗೊಳ್ಳಿ’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ‘ಸರ್ಕಾರಿ ಆಸ್ಪತ್ರೆಗಳ ಮೇಲ್ವಿಚಾರಣೆಗಾಗಿ ಸ್ಥಳೀಯ ಮಟ್ಟದಲ್ಲಿ ಪಿಡಿಒ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗೈರು ಹಾಜರಾಗುವ ಸಿಬ್ಬಂದಿ ವಿರುದ್ಧ ಕ್ರಮಗಳನ್ನು ಕೈಕೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ’ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.