ADVERTISEMENT

ಕವಟಗಿಮಠಗೆ ಮೋಸ ಮಾಡುವುದಿಲ್ಲ: ಬಾಲಚಂದ್ರ ಅಭಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 17:09 IST
Last Updated 3 ಡಿಸೆಂಬರ್ 2021, 17:09 IST
ಕವಟಗಿಮಠಗೆ ಮೋಸ ಮಾಡುವುದಿಲ್ಲ: ಬಾಲಚಂದ್ರ ಅಭಯ
ಕವಟಗಿಮಠಗೆ ಮೋಸ ಮಾಡುವುದಿಲ್ಲ: ಬಾಲಚಂದ್ರ ಅಭಯ   

ಗೋಕಾಕ (ಬೆಳಗಾವಿ ಜಿಲ್ಲೆ): ‘ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೆ ನೀಡಿರುವ ಭರವಸೆಯಂತೆ ಅವರನ್ನು ಗೆಲ್ಲಿಸುತ್ತೇವೆ. ಮೋಸವನ್ನಂತೂ ಮಾಡುವುದಿಲ್ಲ. ಆ ಬಗ್ಗೆ ಚಿಂತೆ ಬಿಡಿ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಯ ನೀಡಿದರು.

ಚುನಾವಣೆ ಪ್ರಚಾರಾರ್ಥ ನಡೆದ ಸಮೀಪದ ಮೆಳವಂಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾ.ಪಂ. ಸದಸ್ಯರು ಹಾಗೂ ಬಿಜೆಪಿ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿದು ಕಾಂಗ್ರೆಸ್ ಸೋಲಿಸಬೇಕು. ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 610 ಸ್ಥಳೀಯ ಸಂಸ್ಥೆಗಳ ಸದಸ್ಯರಿದ್ದಾರೆ. ಇವೆಲ್ಲ ಮತಗಳೂ ನಮಗೆ ಬೀಳಲಿವೆ. ಎಲ್ಲರೂ ನಾವು ಹೇಳಿದಂತೆಯೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘12 ವರ್ಷಗಳಿಂದ ವಿಧಾನಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು 3ನೇ ಬಾರಿಗೆ ಆಯ್ಕೆ ಮಾಡಬೇಕು’ ಎಂದು ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕೋರಿದರು.

‘ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಅನೇಕ ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಅನುದಾನವನ್ನು ಸದಸ್ಯರ ಸಂಖ್ಯೆ ಮತ್ತು ಜನಸಂಖ್ಯೆ ಆಧಾರದ ಮೇಲೆ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ‘12 ವರ್ಷಗಳಿಂದ ಸಕ್ರಿಯರಾಗಿ ಜನರ ನಡುವಿದ್ದ ಕೆಲಸ ಮಾಡಿರುವ ಕವಟಗಿಮಠ ಅವರನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗಳನ್ನು ಬಲಪಡಿಸಬೇಕು’ ಎಂದು ಕೋರಿದರು.

ಪಕ್ಷದ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.