ಬೆಳಗಾವಿ: ವಿದ್ಯುತ್ ದರ ಹೆಚ್ಚಳ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಇಲ್ಲಿನ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ಕೊರೊನಾ ಹಾವಳಿ ಹಾಗೂ ಸುದೀರ್ಘ ಲಾಕ್ಡೌನ್ ಕಾರಣದಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೆಲಸವಿಲ್ಲದೆ ಹಾಗೂ ಗಳಿಕೆ ಇಲ್ಲದೆ ತೊಂದರೆಗೆ ಒಳಗಾಗಿವೆ. ಹೀಗಿರುವಾಗ, ರಾಜ್ಯ ಸರ್ಕಾರ ಪ್ರತಿ ಯನಿಟ್ ವಿದ್ಯುತ್ಗೆ 40 ಪೈಸೆ ಎರಿಸುವ ನಿರ್ಧಾರ ಕೈಗೊಂಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ’ ಎಂದು ತಿಳಿಸಿದರು.
‘ದೇಶದಲ್ಲಿ ಪ್ರಸ್ತುತ ಆರ್ಥಿಕ ಸ್ಥಿತಿ ಸರಿ ಇಲ್ಲ. ಕೈಗಾರಿಕಾ ಉತ್ಪನ್ನಗಳಿಗೆ ನಿರೀಕ್ಷಿತ ಬೇಡಿಕೆ ಇಲ್ಲದೆ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳು ಕಂಗಾಲಾಗಿವೆ. ಎಷ್ಟೋ ಕೈಗಾರಿಕೆಗಳು ಕೋವಿಡ್–19 ಲಾಕ್ಡೌನ್ ಹೊಡೆತ ತಾಳಲಾರದೆ ಬಂದ್ ಆಗಿವೆ. ಬಹಳಷ್ಟು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಹೀಗಿರುವಾಗ ವಿದ್ಯುತ್ ದರ ಹೆಚ್ಚಿಸುವುದು ಯಾವುದೇ ಕಾರಣದಿಂದಲೂ ಸರಿಯಾದುದಲ್ಲ. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಮೂಲಕ ಕೈಗಾರಿಕೋದ್ಯಮಿಗಳಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ರೋಹನ್ ಜುವಳಿ, ಉದ್ಯಮಿಗಳಾದ ವೈಭವ ಯಾದವ, ಬಸವರಾಜ ರಾಮಪುರೆ, ಬಸವರಾಜ ಜವಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.