ಗೋಕಾಕ: ‘ಮುಂಗಾರು ಮಳೆ ವಿಳಂಬಗೊಳ್ಳುತ್ತಿದ್ದು, ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಆರಂಭವಾಗಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಪರಿಸ್ಥಿತಿ ನಿರ್ವಹಿಸಬೇಕು’ ಎಂದು ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ‘ಮಳೆಯ ಅಭಾವದಿಂದಾಗಿ ಹಿಡಕಲ್ ಜಲಾಶಯದಲ್ಲಿ ನೀರಿನ ಮಟ್ಟ ಇಳಿದಿದ್ದು ಗೋಕಾಕ ನಗರ ಸೇರಿ ಗ್ರಾಮೀಣ ಭಾಗದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವಂತೆ ಬಿಸಿಯೂಟ ಯೋಜನಾಧಿಕಾರಿಗಳಿಗೆ ಸೂಚಿಸಿದ ಅವರು, ನೀರಿನ ಸದ್ಭಳಕೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಮಂಜುನಾಥ ಕೆ. ಸೇರಿದಂತೆ ತಾಲ್ಲೂಕುಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.