ADVERTISEMENT

ಬೆಳಗಾವಿ ಅಧಿವೇಶನ: ಅಚ್ಚುಕಟ್ಟಾಗಿ ಜವಾಬ್ದಾರಿ ನಿರ್ವಹಿಸಿ; ಮೊಹಮ್ಮದ್‌ ರೋಷನ್‌

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 3:06 IST
Last Updated 4 ಡಿಸೆಂಬರ್ 2025, 3:06 IST
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದರು
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದರು   

ಬೆಳಗಾವಿ: ‘ಇಲ್ಲಿ ಡಿ.8ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ  ಅಧಿವೇಶನಕ್ಕಾಗಿ ರಚಿಸಿದ ವಿವಿಧ ಸಮಿತಿ ಹಾಗೂ ಉಪ ಸಮಿತಿಗಳು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಆಧಿವೇಶನ ಪೂರ್ವಸಿದ್ಧತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಸತಿ, ಸಾರಿಗೆ, ಊಟೋಪಚಾರ ಮತ್ತಿತರ ವ್ಯವಸ್ಥೆ ಖಚಿತಪಡಿಸಿಕೊಂಡು, ಯಾವುದೇ ಲೋಪಕ್ಕೆ ಆಸ್ಪದ ನೀಡದಂತೆ ಪರಸ್ಪರ‌ ಸಮನ್ವಯದಿಂದ ಎಲ್ಲರೂ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ಕೊಟ್ಟರು.‌

ADVERTISEMENT

ಮಿನಿ ಬಸ್‌ ವ್ಯವಸ್ಥೆ ಕಲ್ಪಿಸಿ: ‘ಅಧಿವೇಶನ ಕೆಲಸಕ್ಕೆ ನಿಯೋಜನೆಗೊಂಡ ಅಧಿಕಾರಿ, ಸಿಬ್ಬಂದಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಧಿವೇಶನ ವೀಕ್ಷಣೆಗಾಗಿ ಆಗಮಿಸುವ ಶಾಲೆ–ಕಾಲೇಜು ವಿದ್ಯಾರ್ಥಿಗಳನ್ನು ಮುಖ್ಯದ್ವಾರದಿಂದ ಸೌಧದವರೆಗೆ ಕರೆತರಲು‌ ನಿಯಮಿತವಾಗಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ತಿಳಿಸಿದರು.

‘ಅಧಿವೇಶನ ವೇಳೆ ಸುವರ್ಣ ವಿಧಾನಸೌಧದಲ್ಲಿ ಸಚಿವರು, ಶಾಸಕರು, ಅಧಿಕಾರಿಗಳಿಗೆ ಪ್ರತ್ಯೇಕವಾಗಿ ಊಟದ ಕೌಂಟರ್‌ಗಳ ವ್ಯವಸ್ಥೆ ಮಾಡಬೇಕು. ಕಳೆದ ಸಲದಂತೆ ಈ ಸಲವೂ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

ನಗರ ಪೊಲೀಸ್‌ ಕಮಿಷನರ್‌ ಭೂಷಣ ಬೊರಸೆ, ವಿವಿಧ ಬಗೆಯ ಪಾಸ್‌ಗಳ ವಿತರಣೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ಮಾತನಾಡಿದರು.

ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರೊಬೇಷನರಿ  ಐಎಎಸ್ ಅಧಿಕಾರಿ ಅಭಿನವ ಜೈನ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಇದ್ದರು.

‘ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಿ’

‘ಅಧಿವೇಶನ ವೀಕ್ಷಣೆಗಾಗಿ ಆಗಮಿಸುವ ವಿವಿಧ ಜಿಲ್ಲೆಗಳ ಶಾಲೆ–ಕಾಲೇಜುಗಳ ವಿದ್ಯಾರ್ಥಿಗಳ ಮಾಹಿತಿ ಮೊದಲೇ ಪಡೆದುಕೊಳ್ಳಬೇಕು. ಶಾಲಾ‌ ಶಿಕ್ಷಣ ಇಲಾಖೆ‌ಯ ಬೇರೆ ಜಿಲ್ಲೆಗಳ ಉಪನಿರ್ದೆಶಕರ ಜತೆಗೆ ಸ್ಥಳೀಯ ಅಧಿಕಾರಿಗಳು ವಿಡಿಯೊ ಸಂವಾದದ ಮೂಲಕ ಸಭೆ ನಡೆಸಬೇಕು’ ಎಂದು ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.