ಮೂಡಲಗಿ: ಬೆಳಗಾವಿ– ಬೆಂಗಳೂರು ವಂದೇ ಭಾರತ್ ರೈಲು ಆರಂಭಿಸಲು, ಬೆಳಗಾವಿ– ಮಿರಜ್ ನಡುವೆ ಸಂಚರಿಸುತ್ತಿರುವ ವಿಶೇಷ ರೈಲನ್ನು ಪ್ಯಾಸೇಂಜರ್ ರೈಲಾಗಿ ಪರಿವರ್ತಿಸಬೇಕು ಹಾಗೂ ಘಟಪ್ರಭಾ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಕಳೆಪೆಯಾಗಿದ್ದು ಪರಿಶೀಲನೆ ನಡೆಸುವಂತೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಿದರು.
‘ನನ್ನ ಬೇಡಿಕೆಗಳಿಗೆ ಸಚಿವರು ಸ್ಪಂದಿಸಿದ್ದಾರೆ. ವಂದೇ ಭಾರತ್ ರೈಲಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಹೊಸ ರೈಲು ಬೋಗಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಅವುಗಳ ಲಭ್ಯತೆಯ ಆಧಾರದ ಮೇಲೆ ಆದಷ್ಟು ಬೇಗ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ– ಮಿರಜ್ ವಿಶೇಷ ರೈಲನ್ನು ಕೇವಲ ಒಂದು ತಿಂಗಳಲ್ಲಿ ಪ್ಯಾಸೇಂಜರ್ ರೈಲಾಗಿ ಪರಿವರ್ತಿಸಲು ಆದೇಶಿಸುವುದಾಗಿ ಭರವಸೆ ನೀಡಿದ್ದಾರೆ. ಘಟಪ್ರಭಾ ರೈಲು ನಿಲ್ದಾಣದ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಈರಣ್ಣ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.