ADVERTISEMENT

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಚುನಾವಣೆ ವೇಳಾಪಟ್ಟಿ ಪ್ರಕಟ

ಗರಿಗೆದರಿದ ಚಟುವಟಿಕೆಗಳು

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 16:19 IST
Last Updated 11 ಜೂನ್ 2020, 16:19 IST

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಆ.7ರಂದು ಚುನಾವಣೆ ನಿಗದಿಯಾದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಮಟ್ಟದಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಅಧಿಸೂಚನೆ ಪ್ರಕಾರ, ಜುಲೈ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 31ರಂದು ಚುನಾವಣಾಧಿಕಾರಿ ನಾಮಪತ್ರಗಳನ್ನು ಪರಿಶೀಲಿಸುವರು. ಆ.1 ಉಮೇದುವಾರರು ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆ.7ರಂದು ಚುನಾವಣೆ ನಡೆಯಲಿದೆ.

ಮೇ 29ರಂದು ಚುನಾವಣೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ಜಾರಿಯಾದ ಲಾಕ್‌ಡೌನ್‌ನಿಂದಾಗಿ ಆ ಅಧಿಸೂಚನೆ ಹಿಂಪಡೆಯಲಾಗಿದೆ. ಈಚೆಗೆ ಮತ್ತೊಂದು ವೇಳಾಪಟ್ಟಿ ನಿಗದಿಪಡಿಸಿ ಮತ್ತೊಂದು ಅಧಿಸೂಚನೆ ಹೊರಡಿಸಲಾಗಿದೆ. ಇದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ADVERTISEMENT

ಬಿಮ್ಸ್‌ ಆಡಳಿತಾಧಿಕಾರಿ ಎಸ್.ಎಸ್. ಬಳ್ಳಾರಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸಹಕಾರ ಚುನಾವಣಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಈ ಮೊದಲು ಕಾಡಾ ಉಪ ಅಡಳಿತಾಧಿಕಾರಿ ಜಯಶ್ರೀ ಶಿಂತ್ರಿ ಅವರನ್ನುಚ ಚುನಾವಣಾ ಅಧಿಕಾರಿ ಎಂದು ನೇಮಕ ಮಾಡಲಾಗಿತ್ತು. ಬಳಿಕ ಪರಿಷ್ಕೃತ ಆದೇಶ ಮಾಡಲಾಗಿದೆ.

‌16 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

2015ರಲ್ಲಿ ನಡೆದ ಚುನಾವಣೆಯಲ್ಲಿ ರಮೇಶ ಕತ್ತಿ, ಲಕ್ಷ್ಮಣ ಸವದಿ, ಆನಂದ ಮಾಮನಿ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ ಮೊದಲಾದ ಪ್ರಮುಖರು ಆಯ್ಕೆಯಾಗಿದ್ದರು. ಬಳಿಕ, ಬಿಜೆಪಿಯ ರಮೇಶ ಕತ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಜಿಲ್ಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶನದಲ್ಲಿ ಈ ಬಾರಿಯ ಚುನಾವಣೆಯು ಕುತೂಹಲ ಮೂಡಿಸಿದೆ. ಸದ್ಯ ಅಧ್ಯಕ್ಷರಾದ ರಮೇಶ ಕತ್ತಿ ಅವರು ರಾಜ್ಯಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ಸಿಗದೆ ಬೇಸರಗೊಂಡಿದ್ದಾರೆ. ಹೋದ ಚುನಾವಣೆ ಕಾಲಕ್ಕೆ ಕಾಂಗ್ರೆಸ್‌ನಲ್ಲಿದ್ದ ರಮೇಶ ಜಾರಕಿಹೊಳಿ ಈಗ ಬಿಜೆಪಿಯಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ. ಅವರು ಯಾರಿಗೆ ಬೆಂಬಲ ನೀಡುತ್ತಾರೆ ಎನ್ನುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

‘ರಾಜ್ಯದ ವಿವಿಧ ಜಿಲ್ಲೆಯ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ಅವಧಿ ಮುಗಿದಿದ್ದು, ಕೊರೊನಾ ಭೀತಿ ಇರುವುದರಿಂದಾಗಿ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಈಚೆಗೆ ತಿಳಿಸಿದ್ದರು. ಈ ನಡುವೆಯೇ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಕ್ರಿಯೆಗಳನ್ನು ನಡೆಸಲು ಸಹಕಾರ ಇಲಾಖೆಯು ಸಿದ್ಧತೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.