ಬೆಳಗಾವಿ: ‘ಕಳೆದ ವರ್ಷ ಮಲಪ್ರಭಾ ನದಿ ಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡ ರಾಮದುರ್ಗ ತಾಲ್ಲೂಕಿನ ನೂರಾರು ಮನೆಗಳಿಗೆ ತಕ್ಷಣ ಪರಿಹಾರ ಒದಗಿಸದಿದ್ದರೆ ಇದೇ ತಿಂಗಳ 15ರಂದು ಆಮರಣ ಉಪವಾಸ ಹಮ್ಮಿಕೊಳ್ಳಲಾಗುವುದು’ ಎಂದು ಸಂತ್ರಸ್ತರು ಎಚ್ಚರಿಕೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡ ಅವರು, ‘ಪ್ರವಾಹಕ್ಕೆ ಸಿಲುಕಿ ಮನೆಗಳು ನೆಲಸಮಗೊಂಡು 10 ತಿಂಗಳು ಕಳೆದರೂ ಎಲ್ಲ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ. ಜಿ.ಪಿ.ಎಸ್. ಮಾಡದಿದ್ದರಿಂದ ಇದುವರೆಗೆ ಪರಿಹಾರ ದೊರೆತಿಲ್ಲ. ತಕ್ಷಣ ಇದರ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದರು.
‘ಈಗ ಜೂನ್ ತಿಂಗಳು ಬಂದಿದ್ದು, ಮತ್ತೆ ಮಳೆಗಾಲ ಆರಂಭವಾಗಲಿದೆ. ತಕ್ಷಣ ಪರಿಹಾರದ ಹಣ ಬಿಡುಗಡೆ ಮಾಡದಿದ್ದರೆ ಬಡವರು, ಕೂಲಿ ಕಾರ್ಮಿಕರು ಎಲ್ಲಿಗೆ ಹೋಗಬೇಕು’ ಎಂದು ಪ್ರಶ್ನಿಸಿದರು.
ನೀಲಪ್ಪ ಹರನಟ್ಟಿ, ಶಿವಬಸಪ್ಪ ಮೂಡಿಗೇರ, ಎನ್.ಆರ್. ಕುಲಕರ್ಣಿ, ಮಲ್ಲಿಕಾರ್ಜುನ ಹುಬ್ಬಳ್ಳಿ, ಎಂ.ಎಫ್. ನದಾಫ, ವಿ.ವಿ. ಹೊಸಕೇರಿ, ಇತರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.