ಬೆಳಗಾವಿ: ‘ನಗರದಲ್ಲಿರುವ ಕರೆ ಮತ್ತು ಉದ್ಯಾನಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಿ, ಆದಷ್ಟು ತ್ವರಿತವಾಗಿ ಟೆಂಡರ್ ಕರೆದು ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಪಾಲಿಕೆ ಅಧಿಕಾರಿಗಳು ಹಾಗೂ ಸ್ಮಾರ್ಟ್ಸಿಟಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ನಗರದಲ್ಲಿ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕಾಲಕಾಲಕ್ಕೆ ಬಿಡುಗಡೆಯಾದರೂ ಸಹ ಪಾಲಿಕೆಯಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ’ ಎಂದರು.
‘ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಮಹಾನಗರ ಪಾಲಿಕೆ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಕಾಮಗಾರಿಗಳೇ ಆಗಿಲ್ಲ. ಸರ್ಕಾರದ ಕೆಲಸ ಸರಿಯಾಗಿ ಮಾಡದವರನ್ನು ಸಹಿಸಿಕೊಳ್ಳುವುದಿಲ್ಲ. ನಿರ್ಲಕ್ಷ್ಯ ಮುಂದುವರಿದರೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದೂ ಎಚ್ಚರಿಕೆ ನೀಡಿದರು.
‘ಯೋಜನೆ ಮಂಜೂರು ಮಾಡುವ ಮುಂಚೆಯೇ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಕಾಲಮಿತಿ ಉಲ್ಲೇಖ ಮಾಡಲಾಗಿರುತ್ತದೆ. ಆದರೆ ಅದೇ ಕಾಲಮಿತಿಯೊಳಗೆ ಕಾಮಗಾರಿಗಳು ಪೂರ್ಣಗೊಳಿಸದೆ ಅಭಿವೃದ್ಧಿ ಕುಂಠಿತವಾಗುತ್ತಿವೆ. ಪಾಲಿಕೆ ಅಧಿಕಾರಿಗಳು ನಿರಂತರ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು’ ಎಂದರು.
‘ನಗರದಲ್ಲಿ ಎಷ್ಟೋ ಜನರಿಗೆ ನಿವೇಶನ ಮತ್ತು ಮನೆಗಳಿಲ್ಲ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಸಲ್ಲಿಸಬೇಕು. ಸ್ವಚ್ಛ ಭಾರತ ಯೋಜನೆಯಡಿ ನಗರದ ಸ್ವಚ್ಛತೆ, ರಸ್ತೆಗಳ ಸ್ವಚ್ಛತೆ, ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಸಂಸದ ಹೇಳಿದರು.
‘ಜಿಲ್ಲೆಯ ಹಿಂದುಳಿದ ತಾಲೂಕುಗಳಲ್ಲಿ ಬೈಲು ಶೌಚಾಲಯ ಈವರೆಗೂ ಇದೆ. ಅಧಿಕಾರಿಗಳು ಅಂತಹ ಗ್ರಾಮಗಳನ್ನು ಗುರುತಿಸಿ ಜನ ಜಾಗೃತಿ ಮೂಡಿಸಿ, ಶೌಚಾಲಯಗಳ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಅವರು ತಾಕೀತು ಮಾಡಿದರು.
‘ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ರಿಯಾ ಯೋಜನೆಯಂತೆ ಕಾಲಾವಧಿಯೊಳಗೆ ಕಾಮಗಾರಿ ಕೈಗೆತ್ತಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
‘ಬಹಳಷ್ಟು ಗ್ರಾಮೀಣ ಭಾಗದಲ್ಲಿ ಗ್ರೇ ವಾಟರ್ ಮ್ಯಾನೇಜ್ಮೆಂಟ್ ಮೂಲಕ ಹಳ್ಳ, ನದಿಗಳಿಗೆ ಚರಂಡಿ ನೀರು ಬಿಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲದ ಗ್ರಾಮಗಳನ್ನು ನರೇಗಾ ಯೋಜನೆಡಿ ಗುರುತಿಸಿ, ಚರಂಡಿ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಹಿಂಗಾರು ಬೀಜ ವಿತರಣೆ ಈಗಾಗಲೇ ಎಲ್ಲ ಕಡೆಗೆ ವಿತರಣೆ ಮಾಡಲಾಗಿದೆ. ರಸಗೊಬ್ಬರ ಕೊರತೆ ಇಲ್ಲ. ತೋಟಗಾರಿಕೆ ಬೆಳೆ ಹಾನಿ 3320 ಹೆಕ್ಟೇರ್ ಬೆಳೆ ಹಾಳಾಗಿವೆ. ಪರಿಹಾರ ಒದಗಿಸಲು ಮಾಹಿತಿ ಸಲ್ಲಿಸಲಾಗಿದೆ’ ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ವಿವರಿಸಿದರು.
ಪಾಲಿಕೆ ಆಯುಕ್ತೆ ಬಿ.ಶುಭ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಡಾದಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳ ಇತರರು ಇದ್ದರು.
ಜಿಲ್ಲೆಯಲ್ಲಿ ಈ ವರ್ಷ ಮಳೆಯ ಕಾರಣದಿಂದ 5 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಅವಲಂಬಿತರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆವಿಜಯಕುಮಾರ ಹೊನಕೇರಿ ಹೆಚ್ಚುವರಿ ಜಿಲ್ಲಾಧಿಕಾರಿ
ಚಿಕ್ಕೋಡಿ ಭಾಗದಲ್ಲಿ ಬಹು ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳಿಸಲಾಗುವುದುರಾಹುಲ್ ಶಿಂಧೆ ಸಿಇಒ ಜಿಲ್ಲಾ ಪಂಚಾಯಿತಿ
‘ಕಲಿಕಾ ಮಟ್ಟ ಹಿಂದುಳಿಯದಿರಲಿ’
‘ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಿಕಾ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿರುವ ಕಾರಣ ರಜೆ ದಿನಗಳನ್ನು ಹೆಚ್ಚಿಸಲಾಗಿದೆ. ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಬರುವ ದಿನಗಳಲ್ಲಿ ಕಲಿಕಾ ಅವಧಿಗೆ ಹಿಂದೆ ಉಳಿದಂತೆ ನೋಡಿಕೊಳ್ಳಬೇಕು’ ಎಂದು ಶೆಟ್ಟರ್ ತಿಳಿಸಿದರು. ‘ಮಳೆಯಿಂದ ಹಾಳಾದ ಗ್ರಾಮೀಣ ಭಾಗದ ತೋಟ ಜಮೀನುಗಳ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಿ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು’ ಎಂದರು.
‘ಅನೀಮಿಯಾ ಪ್ರಮಾಣ ತಗ್ಗಿಸಲು ಕ್ರಮ’
ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಮಾತನಾಡಿ ‘ಮಹಿಳೆಯರಲ್ಲಿ ಅನೀಮಿಯಾ ಸಮಸ್ಯೆ ಶೇ 7.4ಕ್ಕೆ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಗತ್ಯ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು. ‘ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಕ್ಯಾಂಪ್ ಹಮ್ಮಿಕೊಂಡು ಕಾರ್ಯ ನಿರ್ವಹಿಸಿ ಮುಂದಿನ ಸಭೆಯೊಳಗೆ ಅನೀಮಿಯಾ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.