
ಬೆಳಗಾವಿ: ಇಲ್ಲಿನ ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಸೋಮವಾರ ನಡೆದ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನ ಮನಸೆಳೆಯಿತು.
ಜಿಲ್ಲೆಯ ವಿವಿಧೆಡೆಯಿಂದ ಜನರು ಆಗಮಿಸಿ ಪ್ರದರ್ಶನ ವೀಕ್ಷಿಸಿ ಸಂಭ್ರಮಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ‘ನಾವು ಯಾವ ರೀತಿ ವರ್ತಿಸುತ್ತೇವೆಯೋ, ಅದೇ ರೀತಿ ಪ್ರಾಣಿಗಳೂ ನಮ್ಮೊಂದಿಗೆ ವರ್ತಿಸುತ್ತವೆ. ಈ ಬಗ್ಗೆ ಜಾಗೃತಿ ಮೂಡಿಸಲು ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮ ಪ್ರತಿವರ್ಷ ನಡೆಯಲಿ. ತಾಲ್ಲೂಕು ಮಟ್ಟದಲ್ಲೂ ಆಯೋಜನೆಯಾಗಲಿ’ ಎಂದರು.
ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು.
ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.
ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳ 25 ತಳಿಗಳ 300ಕ್ಕೂ ಹೆಚ್ಚು ಶ್ವಾನಗಳು, 9 ತಳಿಗಳ 30ಕ್ಕೂ ಅಧಿಕ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು.
ಪೊಲೀಸ್ ಶ್ವಾನದಳದಿಂದ ನಡೆದ ವಿಶೇಷ ಪ್ರದರ್ಶನ ಗಮನಸೆಳೆಯಿತು. ನಂತರ ರೇಬಿಸ್ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.