ADVERTISEMENT

2,500 ರೈತರ ಆತ್ಮಹತ್ಯೆಗೆ ಸರ್ಕಾರ ಹೊಣೆ: ಬಿ.ವೈ.ವಿಜಯೇಂದ್ರ

ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 2:59 IST
Last Updated 10 ಡಿಸೆಂಬರ್ 2025, 2:59 IST
<div class="paragraphs"><p>ಬಿ.ವೈ.ವಿಜಯೇಂದ್ರ</p></div>

ಬಿ.ವೈ.ವಿಜಯೇಂದ್ರ

   

ಬೆಳಗಾವಿ: ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಎರಡೂವರೆ ವರ್ಷದಲ್ಲಿ 2,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದರು.

ಇಲ್ಲಿನ ಮಾಲಿನಿ ಸಿಟಿಯಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಬ್ಬು ಬೆಳೆಗಾರರು ಸೂಕ್ತ ದರಕ್ಕೆ ದೊಡ್ಡ ಹೋರಾಟ ಮಾಡಿದರೂ ಸರ್ಕಾರ ಸ್ಪಂದಿಸಲಿಲ್ಲ. 30ಕ್ಕೂ ಹೆಚ್ಚು ಕಬ್ಬು ಬೆಳೆಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ಘೋಷಿಸಿದ್ದು ನಿಜ. ಆದರೆ, ಅದಕ್ಕೂ ಹೆಚ್ಚಿನ ದರ ನೀಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ’ ಎಂದರು.

ADVERTISEMENT

‘ಕರ್ನಾಟಕ ಅತೀ ಹೆಚ್ಚು ಕಬ್ಬು ಬೆಳೆಯುವ ರಾಜ್ಯ. ಇದರಿಂದ ₹40 ಸಾವಿರ ಕೋಟಿ ಆದಾಯ ಸರ್ಕಾರಕ್ಕೆ‌ ಬರುತ್ತದೆ. ಆದರೆ, ಪ್ರತಿ ಟನ್‌ಗೆ ₹50 ಪರಿಹಾರ ಘೋಷಿಸಿದ್ದಾರೆ. 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದಾರೆ. ಆದರೂ ಖರೀದಿ ಕೇಂದ್ರ ತೆರೆದಿಲ್ಲ. ಶೀತಲೀಕರಣ ಘಟಕ ತೆರೆದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ 6.5 ಲಕ್ಷ ಟನ್ ತೊಗರಿ ಬೆಳೆದಿದ್ದಾರೆ. ಅಡಕೆಗೆ ಚುಕ್ಕೆ ರೋಗ ಬಂದಿದೆ. ಇದೆಲ್ಲವನ್ನೂ ಸರ್ಕಾರ ಗಮನಿಸುತ್ತಲೇ ಇಲ್ಲ’ ಎಂದರು.

‘ಜನ ಹೊಡೆಯುತ್ತಾರೆ ಎಂಬ ಭಯಕ್ಕೆ ಮುಖ್ಯಮಂತ್ರಿ, ಸಚಿವರು ಈಗ ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲೇ ರೈತ ಹೋರಾಟ ನಡೆದರೂ ಯಡಿಯೂರಪ್ಪ ಹೋಗುತ್ತಿದ್ದರು. ಹಗಲು– ರಾತ್ರಿ ರೈತಪರ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದರು. ಅದೇ ದಾರಿಯಲ್ಲಿ ಬಿಜೆಪಿ ನಡೆಯುತ್ತಿದೆ’ ಎಂದರು.

ಸರ್ಕಾರ ಸತ್ತು ಹೋಗಿದೆ: ವಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ‘ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮಾನ ಮರ್ಯಾದೆ ಇಲ್ಲ. ಸರ್ಕಾರ ಸತ್ತು ಹೋಗಿದೆ. ಯಡಿಯೂರಪ್ಪ ಅವರು ಜಾರಿಗೆ ತಂದ ಯೋಜನೆಗಳನ್ನು ಕಡಿತ ಮಾಡಿದರು. ಕಿಸಾನ್‌ ಸಮ್ಮಾನ್‌ ಜತೆಗೆ ನೀಡುತ್ತಿದ್ದ ₹4,000, ರೈತ ವಿದ್ಯಾನಿಧಿ ಸೇರಿದಂತೆ ಎಲ್ಲವನ್ನು ಬಂದ್ ಮಾಡಿದರು. ಗ್ಯಾರಂಟಿಯ ನೆಪ ಮಾತ್ರ ಹೇಳುತ್ತಿದ್ದಾರೆ’ ಎಂದು ಆರೋಪಿಸಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ‘ಅತಿವೃಷ್ಟಿಯಿಂದ ರಾಜ್ಯದಲ್ಲಿ 38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಮಳೆಯಿಂದ ಮನೆ ಹಾನಿಯಾದರೆ ಯಡಿಯೂರಪ್ಪ ಸರ್ಕಾರ ₹5 ಲಕ್ಷ ಪರಿಹಾರ ಕೊಡುತ್ತಿತ್ತು. ಸಿದ್ದರಾಮಯ್ಯ ಅದನ್ನು ₹95 ಸಾವಿರಕ್ಕೆ ತಂದಿದ್ದಾರೆ’ ಎಂದು ಕಿಡಿ ಕಾರಿದರು.

ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಸವದಿ, ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ರೈತ‌ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ‌ ನಡಹಳ್ಳಿ,‌ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ‌ಜೊಲ್ಲೆ, ಮುಖಂಡ ಸಂಜಯ ಪಾಟೀಲ, ಮುರುಘೇಂದ್ರಗೌಡ ಪಾಟೀಲ ಸೇರಿದಂತೆ ಹಲವರು ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.