ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಗಾಗ ಮಳೆಯಾಗುತ್ತಿದೆ. ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.15 ಲಕ್ಷ ಕ್ಯುಸೆಕ್ ನೀರು ಶನಿವಾರ ಹರಿದು ಬರುತ್ತಿದೆ.
ಶುಕ್ರವಾರ 97 ಕ್ಯುಸೆಕ್ ಬಂದು ಸೇರುತ್ತಿತ್ತು. ಶನಿವಾರ ಪ್ರಮಾಣ ಹೆಚ್ಚಾಗಿದೆ. ಕೃಷ್ಣಾ ಮತ್ತು ಉಪ ನದಿಗಳ ಒಳಹರಿವಿನಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ. ದೂಧ್ಗಂಗಾ ನದಿಯಿಂದ 27,280 ಕ್ಯುಸೆಕ್ ಮತ್ತು ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ 88,500 ಕ್ಯುಸೆಕ್ ಸೇರಿದಂತೆ ಕಲ್ಲೋಳ ಬಳಿ ಕೃಷ್ಣಾ ನದಿಗೆ ಒಟ್ಟು 1,15,780 ಕ್ಯುಸೆಕ್ ನೀರು ಸೇರುತ್ತಿದೆ.
ಚಿಕ್ಕೋಡಿ ತಾಲ್ಲೂಕಿನ ಮೂರು ಮತ್ತು ನಿಪ್ಪಾಣಿ ತಾಲ್ಲೂಕಿನ ಆರು ಸೇರಿದಂತೆ ಒಟ್ಟು ಒಂಬತ್ತು ಕಿರು ಸೇತುವೆಗಳು ಕೃಷ್ಣಾ, ದೂಧ್ಗಂಗಾ ಮತ್ತು ವೇದಗಂಗಾ ನದಿ ನೀರಿನಲ್ಲಿ ಮುಳುಗಡೆಯಾಗಿದ್ದು, ಸಂಚಾರ ಸ್ಥಗಿತಗೊಂಡಿದೆ. ಪರ್ಯಾಯ ಮಾರ್ಗಗಳಿವೆ. ಮಳೆ ಮುಂದುವರಿದಿರುವುದರಿಂದ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಿಕ್ಕೋಡಿ ತಾಲ್ಲೂಕಿನ ಯಡೂರ ಗ್ರಾಮದಲ್ಲಿ ಎನ್ಡಿಆರ್ಎಫ್ ತಂಡ ಬೀಡು ಬಿಟ್ಟಿದೆ.
ಬೆಳಗಾವಿ ತಾಲ್ಲೂಕಿನ ಕಾಕತಿ ಬಳಿ ಮಾರ್ಕಂಡೇಯ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಮಲಪ್ರಭಾ ಜಲಾಶಯಕ್ಕೆ 1,7208 ಕ್ಯುಸೆಕ್ ಹಾಗೂ ಘಟಪ್ರಭಾ ಜಲಾಶಯಕ್ಕೆ 3,9515 ಕ್ಯುಸೆಕ್ ಒಳಹರಿವಿತ್ತು. ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ 10 ಅಡಿ ಹೆಚ್ಚಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.