ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ದೃಶ್ಯ
ಬೆಳಗಾವಿ: ‘ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ– ಧಾರವಾಡದ ಕೈಗಾರಿಕೆಗಳಿಗೆ ನೀರು ಸರಬರಾಜು ಮಾಡಲು ಕೈಗೊಂಡಿರುವ ಪೈಪ್ಲೈನ್ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಹಾಗಾಗಿ ನಗರದಲ್ಲಿ ಮಾರ್ಚ್ 5ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದೇವೆ’ ಎಂದು ಮಾಜಿ ಸಚಿವ ಶಶಿಕಾಂತ ನಾಯಿಕ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ನೀರು, ನಮ್ಮ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿ, ಈ ಕಾಮಗಾರಿ ನಿಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಮಾರ್ಚ್ 5ರವರೆಗೆ ಗಡುವು ಕೊಟ್ಟಿದ್ದೆವು. ಬೇಡಿಕೆ ಈಡೇರದಿದ್ದರೆ ಧರ್ಮವೀರ ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಪ್ರತಿಭಟನೆ ಕೈಗೊಳ್ಳುವವರಿದ್ದೆವು. ಈಗ ಕಾಮಗಾರಿ ಸ್ಥಗಿತವಾದ ಕಾರಣ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದೇವೆ’ ಎಂದರು.
ಸಾಮಾಜಿಕ ಕಾರ್ಯಕರ್ತ ಸುಜಿತ ಮುಳಗುಂದ, ‘ಪ್ರತಿಭಟನೆಯಿಂದ ಹಿಂದಕ್ಕೆ ಸರಿದ ಮಾತ್ರ ಹೋರಾಟ ನಿಲ್ಲುವುದಿಲ್ಲ. ಈ ಯೋಜನೆ ರದ್ದಾಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ತಿಳಿಸಿದರು.
‘ಹಿಡಕಲ್ ಜಲಾಶಯದಿಂದ ಕೈಗಾರಿಕೆಗಳಿಗೆ ಪೂರೈಸಬೇಕಿರುವ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈಗಾಗಲೇ ಕೈಗಾರಿಕೆಗಳಿಗೆ ನೀಡಲಾಗಿದೆ. ಈಗ ಮತ್ತೆ ಹುಬ್ಬಳ್ಳಿ–ಧಾರವಾಡ ಕೈಗಾರಿಕೆಗಳಿಗೆ ನೀರು ಕೊಟ್ಟರೆ, ಬೆಳಗಾವಿಯಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಲಿದೆ. ಹಾಗಾಗಿ ಈ ಯೋಜನೆ ಕೈಬಿಡಬೇಕು’ ಎಂದು ಒತ್ತಾಯಿಸಿದರು.
ರೈತ ಮುಖಂಡ ಸಿದಗೌಡ ಮೋದಗಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.