ಬೆಳಗಾವಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾನ ಮಾಡುವರೋ, ಇಲ್ಲವೋ ಎನ್ನುವ ಕುತೂಹಲ ಮೂಡಿದೆ.
ಸಿ.ಡಿ. ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು, ಚುನಾವಣೆ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ನಡುವೆ ಅವರಿಗೆ ಕೋವಿಡ್- 19 ದೃಢಪಟ್ಟಿತ್ತು. ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ಬಿಡುಗಡೆಯಾಗಿ ಮನೆಯಲ್ಲಿದ್ದಾರೆ. ಅವರು ಇನ್ನೂ ಗುಣಮುಖವಾಗಿದ್ದಾರೋ ಇಲ್ಲವೋ ಎನ್ನುವ ಮಾಹಿತಿ ಇಲ್ಲ. ಹೀಗಾಗಿ ಅವರು ಹಕ್ಕು ಚಲಾಯಿಸುತ್ತಾರೋ ಇಲ್ಲವೋ ಖಚಿತವಾಗಿಲ್ಲ.
ಗ್ರಾಮೀಣ ಕ್ಷೇತ್ರದ ಶಾಸಕಿ, ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೂ ಕೋವಿಡ್ ದೃಢಪಟ್ಟಿದೆ. ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕೂಡ ಸೋಂಕಿತರಾಗಿದ್ದಾರೆ.
ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರಿಗೂ ಕೋವಿಡ್ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಅವರು ಇದ್ದಾರೆ.
ಕೋವಿಡ್ ಸೋಂಕಿತರು ಹಾಗೂ ಶಂಕಿತರಿಗೆ ಕೊನೆಯ ಒಂದು ಗಂಟೆಯಲ್ಲಿ ಅಂದರೆ ಸಂಜೆ 6ರಿಂದ 7ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅವರು ಪಿಪಿಇ ಕಿಟ್ ಧರಿಸಿ ಬರಬೇಕಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.