ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಮಾರ್ಚ್ 30ರಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಧ್ಯಕ್ಷತೆಯಲ್ಲಿ ಇಲ್ಲಿ ಶನಿವಾರ ನಡೆದ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸುವರು. 31ರಂದು ಬೆಳಿಗ್ಗೆ 10ಕ್ಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಗುವುದು. ಅಭ್ಯರ್ಥಿ ಹಾಗೂ ನಾಯಕರು ಮೂರು ದಿನಗಳವರೆಗೆ ಪ್ರತಿ ದಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ’ ಎಂದು ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಇದನ್ನೂ ಓದಿ:ವಾಹನಗಳ ತಪಾಸಣೆಗೆ ಕಟ್ಟುನಿಟ್ಟಿನ ಸೂಚನೆ
‘ಚುನಾವಣಾ ಪ್ರಚಾರಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ. ಕಾಲ್ ಸೆಂಟರ್, ವಾರ್ ರೂಂ ಕೂಡ ಮಾಡುತ್ತೇವೆ. ಕೋವಿಡ್–19 ನಿಯಮಾವಳಿ ಪ್ರಕಾರ ಪ್ರಚಾರ ಸಮಾವೇಶಗಳನ್ನು ನಡೆಸಲಾಗುವುದು. ಆಕಾಂಕ್ಷಿಗಳಾಗಿದ್ದ ಎಲ್ಲ 30 ಮಂದಿಯನ್ನೂ ಕರೆದು ಚರ್ಚಿಸಿದ್ದೇವೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ. ಸಂಘಟಿತವಾಗಿ ಚುನಾವಣೆ ಎದುರಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.