ಬೆಳಗಾವಿ: ‘ಬೆಳಗಾವಿ ಮೇಯರ್ ಮಂಗೇಶ ಪವಾರ ಹಾಗೂ ಪಾಲಿಕೆ ಸದಸ್ಯ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ, ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು’ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕೀಯ ಒತ್ತಡದ ಮೇರೆಗೆ ಪವಾರ ಮತ್ತು ಜಾಧವ ಅವರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಈ ತೀರ್ಪಿನ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ವರೆಗಿನ ಎಲ್ಲ ಆಯ್ಕೆಗಳನ್ನು ಬಳಸಿಕೊಳ್ಳುತ್ತೇವೆ’ ಎಂದರು.
‘ಸಾಮಾನ್ಯ ಕುಟುಂಬದಿಂದ ಬಂದ ಮಂಗೇಶ ಪವಾರ ಈಗ ಮೇಯರ್ ಸ್ಥಾನಕ್ಕೆ ಏರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಗೌರವವಿಲ್ಲ. ಸ್ವತಃ ಸ್ವಾಭಿಮಾನವೂ ಇಲ್ಲ. ಈ ಪ್ರಕರಣದಲ್ಲಿ ಅಗ್ಗದ ರಾಜಕೀಯ ಮಾಡಲಾಗಿದೆ’ ಎಂದು ದೂರಿದರು.
‘ಈ ಪ್ರಕರಣದಲ್ಲಿ ನಾವು ನ್ಯಾಯ ಪಡೆಯುತ್ತೇವೆ. ಜುಲೈ 2ರಂದು ನಡೆಯಲಿರುವ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಪವಾರ ಮೇಯರ್ ಆಗಿ ಮತ್ತು ಜಾಧವ ಸದಸ್ಯರಾಗಿ ಮತ ಚಲಾಯಿಸುತ್ತಾರೆ ಎಂದು ನಾವು ಭಾವಿಸುತ್ತೇವೆ’ ಎಂದು ಪಾಟೀಲ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.