ADVERTISEMENT

ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ: ಶೇ 100 ಗುರಿ ಸಾಧನೆಗೆ ತಾಕೀತು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 14:38 IST
Last Updated 17 ಫೆಬ್ರುವರಿ 2020, 14:38 IST

ಬೆಳಗಾವಿ: ‘ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನ ಬಳಕೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು. ಅನುದಾನ ಬಳಸಲು ಮಾರ್ಚ್‌ 31ರವರೆಗೆ ಕಾಯದೇ ಮೊದಲ ವಾರದಲ್ಲಿಯೇ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಕೀತು ಮಾಡಿದರು.

ಇಲ್ಲಿ ಸೋಮವಾರ ನಡೆದ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ಸಿದ್ಧವಿರುವುದರಿಂದ ಅನುದಾನ ಬಳಸಬೇಕು. ಅಡಚಣೆ ಇದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕು. ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಕಟ್ಟಡ ದುರಸ್ತಿಗೆ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಅನುದಾನ ಬಳಸಲು ಅವಕಾಶವಿಲ್ಲ. ಆದಾಗ್ಯೂ ಚಿಕ್ಕೋಡಿಯಲ್ಲಿ ಶಿಕ್ಷಣ ಇಲಾಖೆಯಿಂದ ಕಟ್ಟಡ ದುರಸ್ತಿಗೆ ಬಳಸಿರುವ ಬಗ್ಗೆ ಮಾಹಿತಿ ಕೇಳಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಶೇ.40ಕ್ಕೂ ಹೆಚ್ಚಿರುವ ಕಡೆಗಳಲ್ಲಿ ಕಟ್ಟಡ ದುರಸ್ತಿಗೆ ಅನುದಾನ ಬಳಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ಅನುದಾನ ಬಳಕೆಯ ಸೂಕ್ತ ಮಾಹಿತಿ ನೀಡದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.