ADVERTISEMENT

ಬೆಳಗಾವಿ ಅಧಿವೇಶನ: ಯಾವ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ– ಖಾದರ್

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2023, 11:35 IST
Last Updated 7 ನವೆಂಬರ್ 2023, 11:35 IST
<div class="paragraphs"><p>ಬೆಳಗಾವಿಯ ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ನಿತೇಶ್‌ ಪಾಟೀಲ, ಯು.ಟಿ.ಖಾದರ್‌, ಲಕ್ಷ್ಮಿ ಹೆಬ್ಬಾಳಕರ&nbsp;ಇತರರಿದ್ದಾ</p></div>

ಬೆಳಗಾವಿಯ ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ನಿತೇಶ್‌ ಪಾಟೀಲ, ಯು.ಟಿ.ಖಾದರ್‌, ಲಕ್ಷ್ಮಿ ಹೆಬ್ಬಾಳಕರ ಇತರರಿದ್ದಾ

   

ಬೆಳಗಾವಿ: ‘ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಯಾವ ಸಮಸ್ಯೆಯೂ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೆ ಅಗತ್ಯ ವಸತಿ, ಊಟ ಹಾಗೂ ಸಾರಿಗೆ ಸೌಕರ್ಯ ಒದಗಿಸಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ನಿರ್ದೇಶನ ನೀಡಿದರು.

ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಲ್ಲಿನ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಅಧಿವೇಶನದಲ್ಲಿ ಏನೇ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು. ಕಲಾಪಗಳನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ವ್ಯವಸ್ಥೆ ಕಲ್ಪಿಸಬೇಕು’ ಎಂದು ತಿಳಿಸಿದರು.

‘ವಸತಿ, ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಕಳೆದ ಬಾರಿಯಂತೆ ಮುಂದುವರಿಸಬೇಕು. ಕೆಲವು ಹೊಸ ಬೇಡಿಕೆಗಳಿರಬಹುದು. ಆದರೆ, ಪ್ರತಿವರ್ಷದ ಪದ್ಧತಿ ಪಾಲಿಸಬೇಕು’ ಎಂದು ಸೂಚಿಸಿದರು.

‘ಮುದ್ರಣ, ಲೇಖನ ಸಾಮಗ್ರಿಗಳನ್ನು ಅಗತ್ಯತೆ ಆಧರಿಸಿ ತುಸು ಹೆಚ್ಚಿನ ಪ್ರಮಾಣದಲ್ಲೇ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ತಂಗುವ ಹೋಟೆಲ್‌ಗಳು ಮತ್ತು ಸುವರ್ಣ ವಿಧಾನಸೌಧದಲ್ಲಿ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ತಂಡಗಳನ್ನು ನಿಯೋಜಿಸಬೇಕು. ಹಿನ್ನೆಲೆಯಲ್ಲಿ ಸುವರ್ಣಸೌಧ ಕಾಣಿಸುವಂತಹ ಸೆಲ್ಫಿ ಸ್ಪಾಟ್ ರೂಪಿಸಬೇಕು. ಕಲಾಪ ವೀಕ್ಷಣೆಗೆ ಆಗಮಿಸುವವರಿಗೆ ಇದೊಂದು ಸ್ಮರಣೀಯ ಅವಕಾಶವಾಗಬೇಕು’ ಎಂದು ಖಾದರ್ ಹೇಳಿದರು.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ‘ಸೌಧದ ಆವರಣದಲ್ಲಿ ಚಾಲಕರು, ಇತರೆ ಸಿಬ್ಬಂದಿಗೆ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆ ಮಾಡಬೇಕು. ಸಾಧ್ಯವಾದರೆ ಕೂಪನ್‌ ನೀಡಬಹುದು. ಕಲಾಪ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳ ಬಸ್‌ಗಳಿಗೆ ಸೌಧದ ಮುಖ್ಯದ್ವಾರದವರೆಗೆ ಅವಕಾಶ ಕಲ್ಪಿಸಬೇಕು. ಸೌಧದ ಮುಂಭಾಗದಲ್ಲಿ ಸುಂದರ ಉದ್ಯಾನ ನಿರ್ಮಾಣಕ್ಕೆ ಸಂಬಂಧಿಸಿ, ತೋಟಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಯವರು ಪರಿಶೀಲಿಸಿ ಪ್ರಸ್ತಾವ ಸಲ್ಲಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಅಧಿವೇಶನದಲ್ಲಿ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿ ಸಮಿತಿಗಳನ್ನು ರಚಿಸಲಾಗಿದ್ದು, ಈಗಾಗಲೇ ಹಲವು ಸುತ್ತಿನ ಸಭೆ ನಡೆಸಲಾಗಿದೆ. ಕಳೆದ ಬಾರಿ ಶಾಸಕರ ಆಪ್ತ ಸಹಾಯಕರು, ಗನ್‌ಮ್ಯಾನ್ ಮತ್ತಿತರರಿಗೆ ಕೂಪನ್‌ ಆಧಾರದಲ್ಲಿ ಕೆಲವು ಹೋಟೆಲ್‌ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿಯೂ ಅದನ್ನು ಮುಂದುವರಿಸಲಾಗುವುದು’ ಎಂದರು.

‘ವಸತಿ ಹಂಚಿಕೆ, ಅಧಿಕಾರಿಗಳ ವಿವರ ಸೇರಿದಂತೆ ಎಲ್ಲ ಮಾಹಿತಿ ಒಳಗೊಂಡ ಕ್ಯೂಆರ್‌ ಕೋಡ್ ಪುಸ್ತಕದ ಸಾಫ್ಟ್‌ ಪ್ರತಿಯನ್ನು ಪ್ರತಿಯೊಬ್ಬರಿಗೆ ವಿತರಿಸಲಾಗುವುದು. ಕ್ಯೂಆರ್ ಕೋಡ್ ಅನ್ನು ಸುವರ್ಣ ವಿಧಾನಸೌಧದ ಮೂಲೆ–ಮೂಲೆಗಳಲ್ಲಿ ಪ್ರದರ್ಶಿಸಲಾಗುವುದು’ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ‘ಅಧಿವೇಶನದಲ್ಲಿ ಭದ್ರತೆಗೆ ನಿಯೋಜಿಸಲಾಗುವ ಪೊಲೀಸರ ವಸತಿಗಾಗಿ ತಾತ್ಕಾಲಿಕ ಟೌನ್‌ಷಿಪ್‌ಗಳನ್ನು ನಿರ್ಮಿಸಲಾಗುತ್ತಿದೆ. ಜಿಲ್ಲಾಡಳಿತದ ಸಮನ್ವಯದೊಂದಿಗೆ ಒಟ್ಟು 22 ಕಡೆ ಸಮರ್ಪಕವಾಗಿ ಸೌಕರ್ಯ ಒದಗಿಸಲಾಗುವುದು’ ಎಂದು ಹೇಳಿದರು.

ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಇತರರಿದ್ದರು.

‘ಬೆಂಗಳೂರಿನ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಿ’

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್‌ ಮತ್ತು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಭೇಟಿ ನೀಡಿ, ವಿಧಾನಮಂಡಲ ಚಳಿಗಾಲದ ಅಧಿವೇಶನದ ಸಿದ್ಧತೆ ಪರಿಶೀಲಿಸಿದರು.

ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಂಗಣ, ಸಭಾಧ್ಯಕ್ಷರು ಮತ್ತು ಸಭಾಪತಿ ಕೊಠಡಿ, ಸೆಂಟ್ರಲ್ ಹಾಲ್, ವಿರೋಧ ಪಕ್ಷದ ಮೊಗಸಾಲೆ, ಸಚಿವರ ಮೊಗಸಾಲೆ, ಕ್ಯಾಬಿನೆಟ್ ಹಾಲ್, ಆಡಿಟೋರಿಯಂ ಮತ್ತಿತರ ಸ್ಥಳಗಳಲ್ಲಿ ಕೈಗೊಂಡ ವ್ಯವಸ್ಥೆ ವೀಕ್ಷಿಸಿದರು.

‘ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಹೊರಟ್ಟಿ ನಿರ್ದೇಶನ ನೀಡಿದರು.

‘ಧ್ವನಿವರ್ಧಕ, ಆಸನ, ಅಂತರ್ಜಾಲ ಸಂಪರ್ಕ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಬೇಕು. ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿ.ವಿ ಅಳವಡಿಸಬೇಕು. ಸಭಾಧ್ಯಕ್ಷರ ಕುರ್ಚಿ ಎದುರು ಎಲ್ಲ ಶಾಸಕರ ಹೆಸರು ಹಾಗೂ ಆಸನ ಸಂಖ್ಯೆಯ ಮಾಹಿತಿಯನ್ನು ಪ್ರದರ್ಶಿಸುವ ಚಾರ್ಟ್ ಅಳವಡಿಸಬೇಕು’ ಎಂದು ತಿಳಿಸಿದರು.

ಸಾರ್ವಜನಿಕರಿಗೂ ಕೊಠಡಿ ಕಲ್ಪಿಸಿ: ಹೆಬ್ಬಾಳಕರ

‘ಡಿಸೆಂಬರ್‌ನಲ್ಲಿ ಮದುವೆ ಸಮಾರಂಭಗಳು ಇರುವುದರಿಂದ ಬೆಳಗಾವಿಯ ಕೆಲವು ವಸತಿಗೃಹಗಳಲ್ಲಿ ಸಾರ್ವಜನಿಕರಿಗೂ ಸ್ವಲ್ಪ ಪ್ರಮಾಣದಲ್ಲಿ ಕೊಠಡಿ ಒದಗಿಸಲು ಅವಕಾಶ ಕಲ್ಪಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕೋರಿದರು.

‘ಅಧಿವೇಶನ ಸಂದರ್ಭ ನಗರದ ಕೆಲವು ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶೇ 10ರಷ್ಟು ಕೊಠಡಿ ಮೀಸಲಿಡಬೇಕು. ಈ ಬಗ್ಗೆ ಹೋಟೆಲ್ ಮಾಲೀಕರು ಹಾಗೂ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು’ ಎಂದು ಖಾದರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.