ಬೆಳಗಾವಿ: ‘ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ನಡೆಯುತ್ತಿರುವ ನಡುವೆಯೇ ಬೇರೆ ಬೇರೆ ಇಲಾಖೆಗಳವರೂ ಕೆಲಸ ಕೈಗೆತ್ತಿಕೊಳ್ಳುತ್ತಿದ್ದಾರೆ. ಎಲ್ಲಿ ನೋಡಿದರೂ ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಸೂಚಿಸಿದರು.
ಇಲ್ಲಿನ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಹೆಸ್ಕಾಂ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳು, ಗ್ಯಾಸ್ ಪೈಪ್ಲೈನ್ ಗುತ್ತಿಗೆದಾರರು ಅಗೆಯುವ ಕೆಲಸವನ್ನು ತಕ್ಷಣ ಪೂರ್ಣಗೊಳಿಸಬೇಕು. ಸ್ಮಾರ್ಟ್ ಸಿಟಿ ಕೆಲಸಗಳು ಮುಗಿದ ನಂತರ ಮತ್ತೆ ಅಗೆಯಲು ಅವಕಾಶವಿಲ್ಲ. ಅಗೆಯುವ ಮುನ್ನ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಲಾಖೆಗಳ ಮಧ್ಯೆ ಮಾಹಿತಿ ವಿನಿಮಯ ಮಾಡಿಕೊಂಡು, ಸಮನ್ವಯದಿಂದ ಯೋಜನೆ ಕೈಗೆತ್ತಿಕೊಳ್ಳಬೇಕು. ಇಲ್ಲವಾದಲ್ಲಿ ಜನರು ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ತಿಳಿಸಿದರು.
‘ಗ್ಯಾಸ್ ಪೈಪ್ಲೈನ್ ಅಳವಡಿಯಲು ರಸ್ತೆ ಅಗೆಯುವವರು ನಗರಪಾಲಿಕೆಗೆ ಸಮರ್ಪಕವಾಗಿ ಮಾಹಿತಿ ನೀಡುತ್ತಿಲ್ಲ’ ಎಂದು ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ತಿಳಿಸಿದರು.
ಇದೇ ವೇಳೆ, ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿಯನ್ನು ಶಾಸಕರು ಪರಿಶೀಲಿಸಿದರು. ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಯೋಜನೆಗಳ ಪ್ರಗತಿಯನ್ನು ವಿವರಿಸಿದರು.
‘ಸದ್ಯ ಯೋಜನೆಗಳು ಒಂದು ಹಂತಕ್ಕೆ ಬಂದಿವೆ. ಸ್ಪಷ್ಟ ಸ್ವರೂಪ ಪಡೆದು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಇದೇ ಮಾದರಿಯಲ್ಲಿ ಮುಂದುವರಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ಎಚ್ಚರಿಕೆ ಕೊಡಬೇಕು. ಆಗಾಗ ಪ್ರಗತಿ ಪರಿಶೀಲಿಸಬೇಕು’ ಎಂದು ಶಾಸಕರು ನಿರ್ದೇಶನ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.