ಬೆಳಗಾವಿ: ಕೊರೊನಾ ವೈರಸ್ ಭೀತಿ ನಡುವೆಯೂ ಜಿಲ್ಲೆಯಲ್ಲಿ ಜುಲೈ 13ರಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ತಯಾರಿ ಮಾಡಿಕೊಂಡಿದೆ.
ಇಲ್ಲಿನ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆ, ಮಹಾಂತೇಶ ನಗರದ ಕನ್ನಡ ಮಾಧ್ಯಮ ಪ್ರೌಢಶಾಲೆ, ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು, ಸೇಂಟ್ ಕ್ಸೇವಿಯರ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ, ಸೇಂಟ್ ಆಂಥೋನಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ, ಸೇಂಟ್ಪಾಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ, ಸೇಂಟ್ ಮೇರಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಹಾಗೂ ಮರಾಠಾ ಮಂಡಳ ಸಂಯುಕ್ತ ಪದವಿಪೂರ್ವ ಕಾಲೇಜಿನ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ.
2ಸಾವಿರಕ್ಕೂ ಅಧಿಕ ಸಹಾಯಕ ಮೌಲ್ಯಮಾಪಕರನ್ನು ನಿಯೋಜಿಸಲಾಗಿದ್ದ, ಕಡ್ಡಾಯವಾಗಿ ಮುಖಗವಸು ಧರಿಸುವಂತೆ ಅವರಿಗೆ ನಿರ್ದೇಶನ ನೀಡಲಾಗಿದೆ. ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ 144ನೇ ಕಲಂ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.
‘ಮೌಲ್ಯಮಾಪನ ಪ್ರಕ್ರಿಯೆ ಸುಗಮವಾಗಿ ನಡೆಸುವ ಜೊತೆಗೆ ಸಿಬ್ಬಂದಿ ಆರೋಗ್ಯ ದೃಷ್ಟಿಯಿಂದಲೂ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಹೊರತುಪಡಿಸಿ ಬೇರೆ ವಲಯಗಳಿಂದ ಬರುವವರಿಗೆ ಖಾಸಗಿ ವಾಹನ ವ್ಯವಸ್ಥೆ ಮಾಡಲಾಗಿದೆ’ ಎಂದು ಡಿಡಿಪಿಐ ಡಾ.ಎ.ಬಿ. ಪುಂಡಲೀಕ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.