ADVERTISEMENT

ಬೆಳಗಾವಿ: ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳು ಚೇತರಿಕೆಯತ್ತ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 2:10 IST
Last Updated 24 ಜುಲೈ 2025, 2:10 IST
<div class="paragraphs"><p>ಬೆಳಗಾವಿ ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸಭೆ ನಡೆಯಿತು</p></div>

ಬೆಳಗಾವಿ ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸಭೆ ನಡೆಯಿತು

   

ಬೆಳಗಾವಿ: ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 32 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಬುಧವಾರ ಚೇತರಿಕೆ ಕಂಡುಬಂದಿದೆ.

ಮಂಗಳವಾರ ಮಧ್ಯಾಹ್ನ ಎಂದಿನಂತೆ ವಿದ್ಯಾರ್ಥಿಗಳಿಗೆ ಬಿಸಿಯೂಟ ಉಣಬಡಿಸಲಾಗಿತ್ತು. ಆದರೆ, ಸಾಂಬಾರಿನಲ್ಲಿ ಹಲ್ಲಿ ಬಿದ್ದಿತ್ತು. ಇದನ್ನು ಸೇವಿಸಿದ ಕೆಲಹೊತ್ತಿನಲ್ಲೇ ಮಕ್ಕಳು ಅಸ್ವಸ್ಥರಾದರು. ಕೆಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿತು.

ADVERTISEMENT

ಶಿಕ್ಷಕರು ಹಂತ–ಹಂತವಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಸಾಮೂಹಿಕವಾಗಿ ಎಲ್ಲರಿಗೂ ಹೊಟ್ಟೆ ನೋವು ಕಾಣಿಸಿಕೊಳ್ಳಲು ಆರಂಭಿಸಿದ್ದರಿಂದ ಆಂಬುಲೆನ್ಸ್‌ ಕರೆಯಿಸಲಾಯಿತು.

‘ಅಸ್ವಸ್ಥರಾಗಿದ್ದ 23 ಮಕ್ಕಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದೆವು. ನಿತ್ರಾಣಗೊಂಡಿದ್ದ 9 ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಖಾಸಗಿ ಆಸ್ಪತ್ರೆಯಲ್ಲಿನ ಮಕ್ಕಳು ಮಂಗಳವಾರವೇ ಮನೆಗೆ ಮರಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿನ ಮಕ್ಕಳು ಗುರುವಾರ ಬಿಡುಗಡೆಯಾಗಲಿದ್ದಾರೆ’ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಹಿಳಾ ಸ್ವಸಹಾಯ ಸಂಘದವರು ಅಡುಗೆ ಮಾಡಿದ್ದಾರೆ. ಘಟನೆ ಕುರಿತಾಗಿ ವಿಚಾರಣೆ ನಡೆಸುತ್ತಿದ್ದೇವೆ. ಶಾಲಾಭಿವೃದ್ಧಿ ಸಮಿತಿಯೊಂದಿಗೆ ಬುಧವಾರ ಸಭೆ ಮಾಡಿದ್ದೇವೆ. ಎಸ್‌ಡಿಎಂಸಿಯವರು ಕೈಗೊಳ್ಳುವ ನಿರ್ಣಯದ ಮೇಲೆ ಅಡುಗೆ ಸಿದ್ಧಪಡಿಸಿದವರ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಪಕ್ಕದಲ್ಲಿರುವ ಪ್ರಾಥಮಿಕ ಶಾಲೆ ಯಲ್ಲಿ ಬಿಸಿಯೂಟ ಸಿದ್ಧಪಡಿಸಿ, ಒಂದು ವಾರದವರೆಗೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.