ADVERTISEMENT

ಬೆಳಗಾವಿ | ಮಾರ್ಚ್ 1ರವರೆಗೆ ಮಲಪ್ರಭಾ ಜಲಾಶಯದಿಂದ ನೀರು: ಲಕ್ಷ್ಮೀ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2025, 5:16 IST
Last Updated 19 ಫೆಬ್ರುವರಿ 2025, 5:16 IST
<div class="paragraphs"><p>ಲಕ್ಷ್ಮೀ ಹೆಬ್ಬಾಳಕರ</p></div>

ಲಕ್ಷ್ಮೀ ಹೆಬ್ಬಾಳಕರ

   

ಸವದತ್ತಿ (ಬೆಳಗಾವಿ ಜಿಲ್ಲೆ): ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆದೇಶಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿದಂತೆ, 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿ.ಎಂ.ಸಿ ಅಡಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿ.ಎಂ.ಸಿ ಅಡಿ ಸೇರಿ ಒಟ್ಟಾರೆ 30.842 ಟಿ.ಎಂ.ಸಿ ಅಡಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ.

ADVERTISEMENT

ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆ.14ರವರೆಗೆ 16 ಟಿಎಂಸಿ‌ ಅಡಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡಲಾಗಿದೆ.

ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾರ್ಚ್ 15ರವರೆಗೆ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆ.15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾರ್ಚ್ 1ರವರೆಗೆ ಮುಂದುವರೆಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

ಅಲ್ಲದೆ, ಅವಶ್ಯಕ ಕುಡಿಯುವ ನೀರಿಗಾಗಿ ಜೂನ್ ಅಂತ್ಯದವರೆಗೆ 15 ಟಿ.ಎಂ.ಸಿ ಅಡಿ ನೀರನ್ನು ಕಾಯ್ದಿರಿಸಿ ಒದಗಿಸಲು ಸಚಿವೆ ಸೂಚಿಸಿದ್ದಾರೆ. ಜೊತೆಗೆ ಮಾರ್ಚ್ 1ರೊಳಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕುಡಿಯುವ ನೀರಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದೂ ಸೂಚಿಸಿದ್ದಾರೆ.

ಪ್ರಸಕ್ತ ಬೇಸಿಗೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಬೇಡಿಕೆ ಹೆಚ್ಚಾಗುವುದರಿಂದ ಹಿತ- ಮಿತವಾಗಿ ನೀರನ್ನು ಬಳಸುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ನವಿಲುತೀರ್ಥದ ಅಧೀಕ್ಷಕ ಎಂಜಿನಿಯರ್ ವಿ.ಎಸ್. ಮಧುಕರ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.