
ಮಾಧ್ಯಮದವರೊಂದಿಗೆ ಮಾತನಡಿದ ಎಡಿಜಿಪಿ ಹಿತೇಂದ್ರ
– ಪ್ರಜಾವಾಣಿ ಚಿತ್ರ
ಬೆಳಗಾವಿ: ಇಲ್ಲಿನ ಖಾಸಗಿ ಆಸ್ಪತ್ರೆಗೆ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ಶನಿವಾರ ಭೇಟಿ ನೀಡಿ, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುತೂರಾಟ ಪ್ರಕರಣದಲ್ಲಿ ಗಾಯಗೊಂಡಿದ್ದ ಪೊಲೀಸರ ಆರೋಗ್ಯ ವಿಚಾರಿಸಿದರು. ಘಟನೆ ಕುರಿತಾಗಿಯೂ ಮಾಹಿತಿ ಕಲೆಹಾಕಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹತ್ತರಗಿ ಟೋಲ್ ನಾಕಾ ಬಳಿ ಶುಕ್ರವಾರ ನಡೆದ ಕಲ್ಲುತೂರಾಟದಲ್ಲಿ 11 ಪೊಲೀಸರಿಗೆ ಗಾಯಗಳಾಗಿವೆ. ಈವರೆಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ಘಟನಾ ಸ್ಥಳದಲ್ಲಿ ಲಭ್ಯವಾಗಿರುವ ವಿಡಿಯೊ ಪರಿಶೀಲಿಸುತ್ತಿದ್ದೇವೆ. ಸಾಕ್ಷ್ಯಗಳನ್ನು ಆಧರಿಸಿ ಮುಂದಿನ ಕ್ರಮ ವಹಿಸುತ್ತೇವೆ’ ಎಂದರು.
‘ಯಮಕನಮರಡಿ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆದಿದೆ. ಯಾರಿಗೂ ಲಾಠಿ ಬೀಸುವಂತೆ ನಾವು ನಿರ್ದೇಶನ ನೀಡಿಲ್ಲ. ರೈತರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವಷ್ಟೇ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಈ ಘಟನೆಯಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಗಳು, ಪೊಲೀಸ್ ಇಲಾಖೆ ವಾಹನಗಳಿಗೆ ಹಾನಿಯಾಗಿದೆ. ನಾನೂ ಸ್ವತಃ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಲಿದ್ದೇನೆ. ವಿಡಿಯೊ, ಫೋಟೊಗಳನ್ನು ಪರಿಶೀಲಿಸಿ, ಸಾಕ್ಷ್ಯಗಳನ್ನು ಆಧರಿಸಿಯೇ ಮುಂದಿನ ಹೆಜ್ಜೆ ಇರಿಸುತ್ತೇವೆ’ ಎಂದು ಹೇಳಿದರು.
ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಠೋರ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.