ಬೆಳಗಾವಿ: ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಡಮಾಡುವ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭಾಜನರಾಗಿದ್ದಾರೆ.
ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ವತಿಯಿಂದ ಈ ಪ್ರಶಸ್ತಿ ಪ್ರಕಟಿಸಲಾಗಿದೆ.
ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ಹಾಲ್ನಲ್ಲಿ ಜ.25ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಉಪಸ್ಥಿತರಿರುವರು.
ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಇದಲ್ಲದೇ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.