ಬೆಳಗಾವಿ: ನಗರದಲ್ಲಿ ಭಗೀರಥ ಮಹರ್ಷಿ ಜಯಂತಿಯನ್ನು ಮೇ 8ರಂದು ಸಡಗರ–ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
‘ಎರಡು ವರ್ಷಗಳಲ್ಲಿ ಕೊರೊನಾ ಕಾರಣದಿಂದ ಎಲ್ಲ ಮಹನೀಯರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿತ್ತು. ಈಗ ಕೊರೊನಾ ಪ್ರಕರಣ ಇಳಿಕೆ ಆಗಿರುವುದರಿಂದ ಮತ್ತೆ ಮೊದಲಿನಂತೆ ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ಹಿರೇಮಠ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ‘ಭಗೀರಥ ಮಹರ್ಷಿ ಜಯಂತ್ಯುತ್ಸವ ಮೆರವಣಿಗೆಯು ಅಂದು ಸಂಜೆ 4ಕ್ಕೆ ಕೋಟೆಕೆರೆ ಬಳಿಯ ದುರ್ಗಾದೇವಿ ಮಂದಿರದಿಂದ ಆರಂಭವಾಗಿ ಸಂಗೊಳ್ಳಿ ರಾಯಣ್ಣ ವೃತ್ತ–ಚನ್ನಮ್ಮ ವೃತ್ತ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದ ಬಳಿ ಮುಕ್ತಾಯಗೊಳ್ಳಲಿದೆ. ಅಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ರೂಪಕಗಳು ಮತ್ತು ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಬಳಿಕ ಕಿರುನಾಟಕ ಪ್ರದರ್ಶನದ ವ್ಯವಸ್ಥೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು
ಉಪ್ಪಾರ ಸಮಾಜದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಪಿ. ಮೇಲ್ಮಟ್ಟಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಉಪ್ಪಾರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್. ಉಪ್ಪಾರ, ಉಮಾ ಉಪ್ಪಾರ, ವಿನಾಯಕ, ರವೀಂದ್ರ ಉಪ್ಪಾರ, ಚಂದ್ರ ಅಳಗವಾಡಿ, ಪ್ರಭಾಕರ ಉಪ್ಪಾರ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.