ಪ್ರಜಾವಾಣಿ ವಾರ್ತೆ
ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಜೂನ್ 30ರಂದು 2024ನೇ ಸಾಲಿನ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10ಕ್ಕೆ ‘ಬರಗೂರು ರಾಮಚಂದ್ರಪ್ಪ ಅವರ ಬದುಕು ಮತ್ತು ಸಾಧನೆ’ ಕುರಿತು ವಿಚಾರಸಂಕಿರಣ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ ಉದ್ಘಾಟಿಸುವರು. ಅತಿಥಿಗಳಾಗಿ ನಾಟಕಕಾರ ಡಿ.ಎಸ್.ಚೌಗಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿನಿರ್ದೇಶಕ ಕೆ.ಎಚ್.ಚೆನ್ನೂರ ಆಗಮಿಸುವರು. ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಹಿಮ್ಮಡಿ ಆಶಯ ನುಡಿಗಳನ್ನಾಡುವರು. ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷ ಎಸ್.ಐ.ಬಿರಾದಾರ ಅಧ್ಯಕ್ಷತೆ ವಹಿಸುವರು.
11.30ಕ್ಕೆ ನಡೆಯುವ ಗೋಷ್ಠಿಯಲ್ಲಿ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಅಧ್ಯಕ್ಷೆ ವಿನಯಾ ನಾಯಕ ‘ಬರಗೂರು ಸಾಹಿತ್ಯ’, ನಿವೃತ್ತ ಪ್ರಾಧ್ಯಾಪಕ ರಾಜಪ್ಪ ದಳವಾಯಿ ‘ಬರಗೂರು ಸಿನಿಮಾ’, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ ‘ಬರಗೂರು ವ್ಯಕ್ತಿತ್ವ’ ಕುರಿತು ಪ್ರಬಂಧ ಮಂಡಿಸುವರು. ವಿಮರ್ಶಕ ಗುರುಪಾದ ಮರಿಗುದ್ದಿ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ‘ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ’ ಪ್ರದಾನ ಮಾಡುವರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಧ್ಯಕ್ಷತೆ ವಹಿಸುವರು. ಚಿಂತಕ ಕಿರಣ ಗಾಜನೂರು ಅಭಿನಂದನಾ ನುಡಿಗಳನ್ನಾಡುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.