ADVERTISEMENT

ಶಂಕರಾನಂದ ಪ್ರತಿಮೆ ಶಂಕುಸ್ಥಾಪನೆ ನಾಳೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:58 IST
Last Updated 29 ಮೇ 2025, 14:58 IST
ಬಿ.ಶಂಕರಾನಂದ
ಬಿ.ಶಂಕರಾನಂದ   

ಬೆಳಗಾವಿ: ‘ಇಲ್ಲಿನ ಕ್ಲಬ್‌ ರಸ್ತೆಗೆ ಬಿ.ಶಂಕರಾನಂದ ಮಾರ್ಗವೆಂದು ನಾಮಕರಣ ಹಾಗೂ ಶಂಕರಾನಂದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಬಿ.ಶಂಕರಾನಂದ ಜನ್ಮಶತಮಾನೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಪ್ರದೀಪ ಕಣಗಲಿ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಗೃಹ ಸಚಿವ ಜಿ.ಪರಮೇಶ್ವರ್‌ ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ, ಸಂಸದರಾದ ಜಗದೀಶ ಶೆಟ್ಟರ್‌, ಪ್ರಿಯಾಂಕಾ ಜಾರಕಿಹೊಳಿ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಶಾಸಕ ಫಿರೋಜ್‌ ಸೇಠ್‌ ಆಗಮಿಸುವರು. ಶಾಸಕರಾದ ಅಭಯ ಪಾಟೀಲ, ಆಸಿಫ್‌ ಸೇಠ್‌, ಮೇಯರ್‌ ಮಂಗೇಶ ಪವಾರ, ಉಪಮೇಯರ್‌ ವಾಣಿ ಜೋಶಿ ಮತ್ತಿತರರನ್ನು ಸನ್ಮಾನಿಸಲಾಗುವುದು’ ಎಂದರು.

‘ಇಂದು ರಾಜಕಾರಣದಲ್ಲಿ ಮಾತನಾಡುವವರೇ ಹೆಚ್ಚಿದ್ದು, ಕೆಲಸ ಮಾಡುವವರ ಸಂಖ್ಯೆ ಕಡಿಮೆ ಇದೆ. ಆದರೆ, ಕೇಂದ್ರ ಸಚಿವರಾಗಿದ್ದ ಬಿ.ಶಂಕರಾನಂದ ಮಾತನಾಡದೆ, ಕೆಲಸ ಮಾಡಿ ತೋರಿಸುತ್ತಿದ್ದರು. ಪಲ್ಸ್‌ ಪೋಲಿಯೊ ಕಾರ್ಯಕ್ರಮ ಜಾರಿಗೊಳಿಸುವ ಜತೆಗೆ, ಮತದಾನಕ್ಕೆ ನಿಗದಿಪಡಿಸಿದ್ದ ಕನಿಷ್ಠ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿದ್ದರು. ಇದರೊಂದಿಗೆ ಸಾಕಷ್ಟು ಜನೋಪಯೋಗಿ ಕೆಲಸ ಮಾಡಿದ್ದರು. ಬೆಳಗಾವಿಯಲ್ಲಿ ಈ ಹಿಂದೆಯೇ ಅವರ ಪ್ರತಿಮೆ ಪ್ರತಿಷ್ಠಾಪನೆಯಾಗಬೇಕಿತ್ತು. ಈಗ ಅದಕ್ಕೆ ಕಾಲ ಕೂಡಿಬಂದಿದೆ’ ಎಂದು ತಿಳಿಸಿದರು.

ADVERTISEMENT

ಮಾಜಿ ಮೇಯರ್‌ ವಿಜಯ ಮೋರೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.