ADVERTISEMENT

ಅಥಣಿಗೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 14:35 IST
Last Updated 12 ಡಿಸೆಂಬರ್ 2020, 14:35 IST
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಅಥಣಿಗೆ ಬಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಮುಖಂಡರು ಸತ್ಕರಿಸಿದರು
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಅಥಣಿಗೆ ಬಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಮುಖಂಡರು ಸತ್ಕರಿಸಿದರು   

ಅಥಣಿ: ‘ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ. ಪಾಟೀಲರು ಅಥಣಿಗೆ ಹಲವು ಯೋಜನೆಗಳನ್ನು ನೀಡಿದ್ದರು. ಆದರೆ, ಈಗಿನ ಬಿಜೆಪಿ ಸರ್ಕಾರ ಈ ಭಾಗಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಗೋ ಹತ್ಯೆ ನಿಷೇಧಿಸಲು ಮುಂದಾಗಿರುವ ಸರ್ಕಾರ, ರೈತ ವಿರೋಧಿ ಕಾನೂನು ರೂಪಿಸುತ್ತಿದೆ. ಇದರಿಂದಾಗಿ ರೈತರಿಗೆ ಮುಂದಿನ ದಿನಗಳಲ್ಲಿ ಜಾನುವಾರು ಮಾರಾಟ ಮಾಡುವಾಗ ತೊಂದರೆ ಉಂಟಾಗುತ್ತದೆ. ವಿದೇಶಕ್ಕೆ ಮಾಂಸ ರಫ್ತು ವಹಿವಾಟು ನಿಲ್ಲಿಸಲಿ ನೋಡೋಣ’ ಎಂದು ಸವಾಲು ಹಾಕಿದರು.

ADVERTISEMENT

‘ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಹಾಗೂ ಅವರಿಗೆ ಮನೆ ನಿರ್ಮಾಣ ಮಾಡಿಕೊಡಲಾಗಿದೆ ಎಂದುಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಸಂತ್ರಸ್ತರಿಗೆ ಈವರೆಗೂ ಸರ್ಕಾರದಿಂದ ಸಮರ್ಪಕ ಪರಿಹಾರ ಸಿಕ್ಕಿಲ್ಲ’ ಎಂದು ದೂರಿದರು.

ಶಾಸಕ ಎಂ.ಬಿ. ಪಾಟೀಲ, ‘ನಾನು ಗೋ ಹತ್ಯೆ ನಿಷೇಧಿಸುವುದನ್ನು ಸ್ವಾಗತಿಸುತ್ತೇನೆ. ಆದರೆ ದೇಶದಿಂದ ಗೋ ಮಾಂಸ ರಫ್ತು ಮಾಡುವುದನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇನೆ. ಜಾನುವಾರಿಗೆ ವಯಸ್ಸಾದರೆ ಸರ್ಕಾರವೇ ರೈತರಿಂದ ನೇರವಾಗಿ ಖರೀದಿಸಿ ಸಾಕಲಿ’ ಎಂದರು.

ಮುಖಂಡರಾದ ಗಜಾನನ ಮಂಗಸೂಳಿ, ಸಿದ್ದಾರ್ಥ ಸಿಂಗೆ, ಸುನೀಲ ಸಂಕ, ಬಸವರಾಜ ಬುಟಾಳಿ, ಸುನೀತಾ ಐಹೋಳೆ, ಧರೆಪ್ಪ ಠಕ್ಕಣ್ಣವರ, ಸದಾಶಿವ ಬುಟಾಳಿ, ಶ್ರೀಕಾಂತ ಪೂಜಾರಿ, ನಿಶಾಂತ ದಳವಾಯಿ, ರಾವಸಾಬ ಐಹೊಳೆ, ಸುರೇಶಗೌಡ ಪಾಟೀಲ, ಅಸ್ಲಮ್ ನಾಲಬಂದ, ಅನಿಲ ಸುಣಧೋಳಿ, ಶಿವಾನಂದ ಗುಡ್ಡಾಪೂರ, ತೌಸಿಫ ಸಾಂಗಲೀಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.