ADVERTISEMENT

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವುದು ನನ್ನ ಗುರಿ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 13:20 IST
Last Updated 19 ನವೆಂಬರ್ 2021, 13:20 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ‘ವಿಧಾನಪರಿಷತ್‌ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದು ಮತ್ತು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ಗೋಕಾಕದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಬಿಜೆಪಿಯಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸುತ್ತಿದ್ದೇವೆ. ವರಿಷ್ಠರು ಒಪ್ಪಿಗೆ ನೀಡಿದರೆ 2ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು’ ಎಂದರು.

‘ಪ್ರಥಮ ಪ್ರಾಶಸ್ತ್ಯದ ಮತವನ್ನು ಮಹಾಂತೇಶ ಕವಟಗಿಮಠ ನೀಡುವಂತೆ ಹಾಗೂ 2ನೇ ಪ್ರಾಶಸ್ತ್ಯದ ಮತ ಕಾಂಗ್ರೆಸ್ ಸೋಲಿಸಲು ಹಾಕುವಂತೆ ಪ್ರಚಾರ ಮಾಡುತ್ತಿದ್ದೇನೆ’ ಎಂದರು.

ADVERTISEMENT

‘ಹಾಲಿ ಸದಸ್ಯ ವಿವೇಕರಾವ್‌ ಪಾಟೀಲ ಅವರಿಗೆ ಕಾಂಗ್ರೆಸ್‍ನಿಂದ ಅನ್ಯಾಯವಾಗಿದೆ. ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ’ ಎಂದು ಹೇಳಿದರು.

‘ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಹಳ ಹುಷಾರಿದ್ದಾರೆ. ಬಹಳಷ್ಟ ಬಾರಿ ಶಾಸಕರಾಗಿದ್ದಾರೆ. ಏನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಿಜೆಪಿ ನಿಮ್ಮನ್ನು ಕಡೆಗಣಿಸುತ್ತಿದೆಯೇ?’ ಎಂಬ ಪ್ರಶ್ನೆಗೆ, ‘ಕಡೆಗಣಿಸಲಿ ಬಿಡಿ. ಕಡೆಗೆ ಕಾರ್ಯಕರ್ತನಾಗಿ, ಶಾಸಕನಾಗಿ ಇರುತ್ತೇನೆ. ಈಗ ನಾನು ಸಂತೋಷವಾಗಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

‘ನಾನು ಕಾಂಗ್ರೆಸ್ ಶಾಸಕನಾಗಿದ್ದಲೂ ಹೋದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರಾಗಿ ಸ್ಪರ್ಧಿಸಿದ್ದ ವಿವೇಕರಾವ್ ಪಾಟೀಲ ಗೆಲುವಿಗೆ ಶ್ರಮಿಸಿದ್ದೆ. ಈಗ ಅಧಿಕೃತವಾಗಿ ಬಿಜೆಪಿಯಲ್ಲಿದ್ದೇನೆ. ಮೇಲ್ಮನೆ ಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.