ADVERTISEMENT

ಇಂದು ಬಿಜೆಪಿಯಿಂದ ಬೃಹತ್‌ ಪ್ರತಿಭಟನ ಸಮಾವೇಶ, ಸುವರ್ಣಸೌಧಕ್ಕೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 4:29 IST
Last Updated 9 ಡಿಸೆಂಬರ್ 2025, 4:29 IST
ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಸೋಮವಾರ, ಬಿಜೆಪಿ ನಾಯಕರು ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ ನೇತೃತ್ವದಲ್ಲಿ ಸಭೆ ನಡೆಸಿದರು
ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಸೋಮವಾರ, ಬಿಜೆಪಿ ನಾಯಕರು ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ ನೇತೃತ್ವದಲ್ಲಿ ಸಭೆ ನಡೆಸಿದರು   

ಬೆಳಗಾವಿ: ‘ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಹಾಗೂ ರೈತ ವಿರೋಧ ನೀತಿ ಖಂಡಿಸಿ ಮಂಗಳವಾರ (ಡಿ.9) ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರತಿಭಟನಾ ಸಮಾವೇಶಕ್ಕೆ ಸಿದ್ಧಪಡಿಸಿದ ಇಲ್ಲಿನ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ಮಾತನಾಡಿದ ಅವರು, ‘ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು.

‘ಪ್ರತಿಭಟನೆಯಲ್ಲಿ ಕನಿಷ್ಠ 25 ಸಾವಿರ ಜನ ಸೇರುತ್ತಾರೆ. ಈ ಸರ್ಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ. ರಾಜ್ಯ ಸರ್ಕಾರಕ್ಕೆ ಜವಾಬ್ದಾರಿಯೇ ಇಲ್ಲ’ ಎಂದು ದೂರಿದರು.

ADVERTISEMENT

‘ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ ₹2400 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರ್ಕಾರ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದ ಕಾರಣ ಮೆಕ್ಕೆ ಜೋಳ ಬೆಳೆಯುವ ರೈತರು ₹1500, ₹1600ಕ್ಕೆ ಮೆಕ್ಕೆಜೋಳ ಮಾರಾಟ ಮಾಡಿದ್ದಾರೆ. ಹತ್ತಿ, ತೊಗರಿ ಮೊದಲಾದ ರೈತರ ಸಮಸ್ಯೆ ಚರ್ಚೆ ನಡೆಸಲಿದ್ದೇವೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಗಾದಿಗೆ ಕಚ್ಚಾಟದ ಕರಿನೆರಳು ರಾಜ್ಯದ ಮೇಲೆ ಬಿದ್ದಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುವ ಪರಿಪಾಠವನ್ನು ಮುಂದುವರಿಸಿದೆ’ ಎಂದು ಟೀಕಿಸಿದರು.

ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ, ಶಾಸಕರಾದ ವಿಠ್ಠಲ ಹಲಗೇಕರ್, ಅಭಯ ಪಾಟೀಲ,  ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ನಗರ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ಸುತಾರ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ಎಂ.ಬಿ.ಝಿರಲಿ, ಅರವಿಂದ ಪಾಟೀಲ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಇದ್ದರು.

ರೊಚ್ಚಿಗೆದ್ದ ರೈತರ ಪರ ಧ್ವನಿ ಎತ್ತುತ್ತಿದ್ದೇವೆ. ಯಡಿಯೂರಪ್ಪ ಅವರು ಮೊದಲಿನಿಂದಲೂ ರೈತಪರವಾಗಿ ಕೆಲಸ ಮಾಡುತ್ತ ಬಂದಿದ್ದಾರೆ. ಅದನ್ನು ಮುಂದುವರಿಸುತ್ತೇವೆ
ಆರ್.ಅಶೋಕ ವಿಧಾನಸಭೆ ವಿಪಕ್ಷ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.